'ಕಾವೇರಿ ಕಾಲಿಂಗ್' ಯೋಜನೆಯಲ್ಲಿ ಮಧ್ಯಪ್ರವೇಶಿಸುವ ಯಾವುದೇ ಪ್ರಶ್ನೆ ಇಲ್ಲ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕಾವೇರಿ ಕಾಲಿಂಗ್ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಾವೇರಿ ಕಾಲಿಂಗ್ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. 

ಈ ವಿಚಾರವನ್ನು ಕೈಗೆತ್ತಿಕೊಂಡ ಹೈಕೋರ್ಟ್, ಬಂಜರು ಭೂಮಿಯಲ್ಲಿ ಮರಗಳನ್ನು ಬೆಳೆಸುವುದು ಅಪರಾಧವಲ್ಲ ಎಂದು ಹೇಳಿದ್ದು, ಕಾವೇರಿ ನದಿ ಪಾತ್ರ ಪ್ರದೇಶದಲ್ಲಿ ಸಸಿಗಳನ್ನು ನೆಡಲು ಈಶ ಔಟ್‌ರೀಚ್ ಹಮ್ಮಿಕೊಂಡಿರುವ ಯೋಜನೆಯನ್ನು ಮುಂದುವರಿಸಲು ಹಸಿರು ನಿಶಾನೆ ನೀಡಿದೆ.

ವಕೀಲ ಎ.ವಿ. ಅಮರನಾಥನ್ ಅವರು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕಾವೇರಿ ಕಾಲಿಂಗ್ ಅಭಿಯಾನ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದರು. ಇದನ್ನು ಕೂಲಂಕಷವಾಗಿ ವಾದ - ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. 

ಇದರಂತೆ ನಿನ್ನೆ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಈ ಸಂಬಂಧ ತೀರ್ಪು ಪ್ರಕಟಿಸಿದೆ.

ತೀರ್ಪಿನಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳು, ಈಗಿರುವ ಪರಿಸ್ಥಿತಿಯಲ್ಲಿ ಅರಣ್ಯ ಬೆಳೆಸುವ ಅಗತ್ಯತೆ ಹೆಚ್ಚಿದೆ. ಈಶ ಔಟ್‌ರೀಚ್ ಸಕಾರಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದು ಬರಡು ಭೂಮಿಯಲ್ಲಿ ಮರ ಬೆಳೆಸುವ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಇಂತಹ ಕಾರ್ಯವನ್ನು ನಾವು ಅಡ್ಡಿಪಡಿಸುವ ಬದಲು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ. ಹಾಗೂ ವಕೀಲರಿಂದ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿರುವ ಹೈಕೋರ್ಟ್, ಇಂತಹ ಮಹತ್ವದ ಯೋಜನೆಯ ತಡೆಗೆ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಅರಣ್ಯ ನಾಶದಿಂದ ಉಂಟಾಗುವ ವಿಪತ್ತು ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಹಂತದಲ್ಲೇ ಹೈಕೋರ್ಟ್ ಅದನ್ನು ಸ್ವಯಂಪ್ರೇರಿತ ಅರ್ಜಿಯನ್ನಾಗಿ ಪರಿವರ್ತಿಸಿಕೊಂಡಿದೆ. ಇಲ್ಲವಾದರೆ ಈ ಅರ್ಜಿಗೆ ಭಾರಿ ದಂಡ ವಿಧಿಸಿ ವಜಾಗೊಳಿಸಿ ಬಹುದಾಗಿದೆ. ಆದರೆ, ಅರ್ಜಿ ಪರಿವರ್ತನೆ ಆದ ಹಿನ್ನೆಲೆ ದಂಡ ವಿಧಿಸುವ ನಿರ್ಧಾರವನ್ನು ಕೈಬಿಡಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com