ಮೈಸೂರು ದಸರಾ ಉದ್ಘಾಟಕರ ಹೆಸರು ಅಂತಿಮವಾಗಿಲ್ಲ, ಸಿಎಂ ಬೊಮ್ಮಾಯಿ ತೀರ್ಮಾನಿಸುತ್ತಾರೆ: ಸಚಿವ ಎಸ್.ಟಿ. ಸೋಮಶೇಖರ್

ಅಕ್ಟೋಬರ್ 7ರಂದು ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತದೆ. 15ನೇ ತಾರೀಖು ಜಂಬೂ ಸವಾರಿ ನಡೆಯಲಿದ್ದು 7ರಿಂದ 15ರವರೆಗೆ ದಸರಾ ಕಾರ್ಯಕ್ರಮ ನೆರವೇರಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರು ಅರಮನೆ ಆವರಣದೊಳಗೆ ಪ್ರವೇಶಿಸುತ್ತಿರುವ ಆನೆಗಳು
ಮೈಸೂರು ಅರಮನೆ ಆವರಣದೊಳಗೆ ಪ್ರವೇಶಿಸುತ್ತಿರುವ ಆನೆಗಳು

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಅರಮನೆಗೆ ಸ್ವಾಗತಿಸಿದರು.

ಅರಮನೆ ಆವರಣದ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ 8.36 ರಿಂದ 9.11ರ ಶುಭ ಲಗ್ನದಲ್ಲಿ ಗಜಪಡೆಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಿದರು.

ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದಲ್ಲಿ ಎಂಟು ಆನೆಗಳು ಅರಮನೆ ಪ್ರವೇಶ ಮಾಡಿದವು. ಮಂಗಳ ವಾದ್ಯ, ಪೂರ್ಣ ಕುಂಭ ಸ್ವಾಗತದ ಮೂಲಕ ಆನೆಗಳನ್ನು ಬರಮಾಡಿಕೊಳ್ಳಲಾಯಿತು.

ನಂತರ ಮಾತನಾಡಿದ ಸಚಿವರು, ಅ.7ರಂದು ದಸರಾ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಅ.15ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ. ಸೆ.23ರವರೆಗೆ ಅಧಿವೇಶನ ಇರುವುದರಿಂದ ದಸರಾ ಉದ್ಘಾಟನೆ ಯಾರಿಂದ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ ಎಂದರು.

ಅಧಿವೇಶನ ಮುಗಿದ ಬಳಿಕ ಪ್ರಮುಖರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ದಸರಾ ಉದ್ಘಾಟನೆಗೆ ಇನ್ನೂ ಯಾರ ಹೆಸರು ಅಂತಿಮಗೊಳಿಸಿಲ್ಲ ಎಂದು ಹೇಳಿದರು.

ದಸರಾ ಉದ್ಘಾಟನೆಗೆ ಗಣ್ಯರ ಆಯ್ಕೆಯನ್ನು ದಸರಾ ಉನ್ನತಾಧಿಕಾರ ಸಮಿತಿಯಲ್ಲಿ ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲಾಗಿದೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಸಂಬಂಧ ಯಾರಾದರೂ ಸಲಹೆ ಕೊಡಬಹುದು. ಅದನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಆಯ್ಕೆ ಮುಖ್ಯಮಂತ್ರಿ ಅವರಿಗೆ ಸೇರಿದ್ದು ಎಂದರು.

ದೇವಸ್ಥಾನ ತೆರವು ವಿಚಾರವಾಗಿ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶದ ಕುರಿತು ಸಚಿವ ಸಂಪುಟದಲ್ಲಿಟ್ಟು ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ಆದೇಶ ಮಾಡಲಾಗುವುದೆಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ದೇಗುಲ ತೆರವು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com