ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಕಳೆದ ರಾತ್ರಿಯಿಂದ ಬೆಳಗ್ಗೆಯವರೆಗೆ ಸತತ ಮಳಯಿಂದಾಗಿ ಕಚೇರಿ, ಕೆಲಸ ಕಾರ್ಯಗಳಿಗೆ ತೆರಳುವವರು, ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಪರದಾಡುವ ಪರಿಸ್ಥಿತಿ ಉಂಟಾಯಿತು.
ಉದ್ಯಾನನಗರಿಯ ಕೆಲವು ಕಡೆಗಳಲ್ಲಿ ಇನ್ನೂ ಜಿಟಿ ಜಿಟಿ ಮಳೆ ಮುಂದುವರಿದಿದೆ. ಅತ್ಯಂತ ಜನನಿಬಿಡ ಪ್ರದೇಶವಾದ ಕೆ.ಆರ್ ಮಾರ್ಕೇಟ್, ಕಾರ್ಪೊರೇಷನ್, ಶಾಂತಿನಗರ, ಜಯನಗರ, ವಿಜಯನಗರ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಮಳೆ ನಸುಕಿನಿಂದಲೇ ಧಾರಾಕಾರ ಸುರಿದಿದೆ.
ಹೊಂಡ-ಗುಂಡಿಗಳಿಂದ ರಸ್ತೆ ತುಂಬಿಹೋಗಿ ವಾಹನ ಸವಾರರು ಬೆಂಗಳೂರಿನಲ್ಲಿ ಈಗಾಗಲೇ ಪರಿತಪಿಸುತ್ತಿರುವಾಗ ಮಳೆಯಿಂದಾಗಿ ಮತ್ತಷ್ಟು ಪರದಾಡುವಂತಾಗಿದೆ.
ಕೊಚ್ಚಿಹೋದ 15 ಸಾವಿರ ಕೋಳಿಗಳು: ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಕೆರೆಕೋಡಿ ಬಿದ್ದು ಕೋಳಿಫಾರಂಗೆ ನೀರು ನುಗ್ಗಿ ಚಿಕ್ಕಬಳ್ಳಾಪುರದ ಚೋಳಶೆಟ್ಟಿಹಳ್ಳಿಯ ನಾಯನಕೆರೆಯಲ್ಲಿ ಎನ್.ಲಕ್ಷ್ಮೀನಾರಾಯಣರೆಡ್ಡಿ ಎಂಬುವವರಿಗೆ ಸೇರಿದ ಕೋಳಿಫಾರಂನಿಂದ ನೀರಿನ ರಭಸಕ್ಕೆ 15 ಸಾವಿರ ಕೋಳಿಗಳು ಕೊಚ್ಚಿಹೋಗಿವೆ.
ವಾಯುಭಾರ ಕುಸಿತ, ಆ. 31ರವರೆಗೆ ಮಳೆ: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಆಗಸ್ಟ್ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ: ಮತ್ತೊಂದೆಡೆ ಕರಾವಳಿ ಜಿಲ್ಲೆಯ ಸಮುದ್ರ ಭಾಗದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.
ದೇಶದ ಹಲವು ರಾಜ್ಯಗಳಲ್ಲಿ ಮಳೆ: ಮುಂದಿನ ಮೂರ್ನಾಲ್ಕು ದಿನಗಳ ಕಾಲ ಒಡಿಶಾ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
Advertisement