ಕೆಲ ದೇಶಗಳಲ್ಲಿನ ಕೋವಿಡ್ ದಿಢೀರ್ ಹೆಚ್ಚಳ ಎಚ್ಚರಿಕೆಯ ಗಂಟೆಯಾಗಿದೆ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ವಿಶ್ವದಾದ್ಯಂತ ಕೆಲ ದೇಶಗಳಲ್ಲಿನ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ ನಮಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋವಿಡ್ ವಿರುದ್ಧ ಹೋರಾಡಲು ಉತ್ತಮ ಮಾರ್ಗವೆಂದರೆ ಕೋವಿಡ್ ಸೋಂಕು ಬರದಂತೆ ತಡೆಯುವುದಾಗಿದೆ. ಇದಕ್ಕಾಗಿ ನಾವು ಕೋವಿಡ್ ವಿರುದ್ಧದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಮರೆಯಬಾರದು. ಲಸಿಕೆ ಪಡೆಯಿರಿ, ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.
ವಿಶ್ವದಾದ್ಯಂತ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಾಗುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆಯಾಗಿದೆ. ರಾಜ್ಯದಲ್ಲಿ ಈವರೆಗೂ ಕೇವಲ ಶೇ.20ರಷ್ಟು ಜನರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡಿದ್ದು, ಎಲ್ಲರೂ ತಪ್ಪದೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡು ಈ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆಂದು ತಿಳಿಸಿದ್ದಾರೆ.
ಕೋವಿಡ್ ನಿಂದ ಭಾರತೀಯರು ಸುರಕ್ಷಿತವಾಗಿದ್ದಾರೆ. ನಮ್ಮ ದೇಶದ ಶೇ.100ರಷ್ಟು ಜನಸಂಖ್ಯೆಯೂ ಎರಡು ಡೋಸ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಎಲ್ಲಾ ಸಕಾರಾತ್ಮಕ ಪ್ರಕರಣಗಳನ್ನು INSACOG ಗೆ ಕಳುಹಿಸಲಾಗುತ್ತಿದ್ದು, ಯಾವ ರೂಪಾಂತರಿ ವೈರಸ್ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ