ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ ವಿಧೇಯಕ: ಪರಿಷತ್ ಸರ್ವಾನುಮತದ ಒಪ್ಪಿಗೆ
ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು. ಮಸೂದೆ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ಪರಿಶಿಷ್ಟರ ಹಿತಾಸಕ್ತಿಗೆ ನಾವು ಬದ್ಧರಾಗಿದ್ದು, ಮುಂದೆ ಎದುರಾಗುವ ಯಾವುದೇ ಪರಿಣಾಮಗಳನ್ನು ಎದುರಿಸಲು ಸಿದ್ಧ ಎಂದರು.
ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಲಾಗಿದ್ದು, ಕೇಂದ್ರಕ್ಕೆ ಕಳುಹಿಸಲಾಗುವುದು, ಒಂದು ವೇಳೆ ಮೀಸಲಾತಿ ಹೆಚ್ಚಳ ಯಾವುದೇ ಹಂತದಲ್ಲಿ ತಿರಸ್ಕೃತಗೊಂಡರೆ ವಿಧಾನಮಂಡಲದ ಅಧಿವೇಶನವನ್ನು ಕರೆದು ಉಭಯ ಸದನಗಳಲ್ಲಿ ಮತ್ತೊಮ್ಮೆ ನಿರ್ಣಯ ಕೈಗೊಳ್ಳಲಾಗುವುದು ಎಂದರು.
103ನೇ ತಿದ್ದುಪಡಿಯು ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ವರದಿ ಸೀಮಿತವಾಗಿ ಮೀಸಲಾತಿ ಹೆಚ್ಚಿಸಲಾಗಿದೆ. ಯಾವುದೇ ತೊಡಕುಗಳು ಎದುರಾಗದಂತೆ ನಿರಂತರವಾಗಿ ಸರ್ಕಾರ ಹೋರಾಟ ಮಾಡಲಿದೆ ಮತ್ತು ಪರಿಹಾರ ಕಂಡುಕೊಳ್ಳಲು ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.
ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಆತುರದಿಂದ ನಿರ್ಧಾರ ಕೈಗೊಳ್ಳಲಾಗಿದೆ. ರಾಜಕೀಯವಾಗಿ ಪರಿಶಿಷ್ಟರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ