ಸುರತ್ಕಲ್ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಡಿ.29ರವರೆಗೆ ನಿಷೇಧಾಜ್ಞೆ ಮುಂದುವರಿಕೆ
ಮಂಗಳೂರು: ಸುರತ್ಕಲ್ನಲ್ಲಿ ಕಾಟಿಪಳ್ಳದ ಜಲೀಲ್ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಿಧಿಸಿದ್ದ 144 ಸೆಕ್ಷನ್ಅನ್ನು ಡಿ.29ರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ನಿಷೇಧಾಜ್ಞೆ ಸಮಯದಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಕ್ಕೆ ಮಹಿಳೆಯರು, 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ 18 ವರ್ಷ ಕೆಳಗಿನ ಮಕ್ಕಳಿಗೆ ವಿನಾಯಿತಿ ಇರಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತು ತುರ್ತು ಸಂದರ್ಭದಲ್ಲಿ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ.
ಈ ಅವಧಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಸಭೆ, ಸಾರ್ವಜನಿಕ ಸಭೆಗಳು, ಜಾಥಾಗಳು, ಮೆರವಣಿಗೆಗಳು ಮತ್ತು ಬಂದೂಕುಗಳು, ಸ್ಫೋಟಕಗಳು ಮತ್ತು ಪಟಾಕಿಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದು ಮತ್ತು ವಿವಿಧ ವರ್ಗಗಳ ಜನರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಶನಿವಾರ ಅಪರಿಚಿತ ದುಷ್ಕರ್ಮಿಗಳು ಜಲೀಲ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ