ತುಮಕೂರು: ಹೊಸ ವರ್ಷಾಚರಣೆ ಸಂಬಂಧ ಜಿಲ್ಲೆಯ ದೇವರಾನಯದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ.
ಈ ವೇಳೆ ಸಾರ್ವಜನಿಕರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಲಿದ್ದು, ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಸಂಭವವಿರುತ್ತದೆ. ಅಲ್ಲದೆ, ನಾಮದಚಿಲುಮೆ ಹಾಗೂ ದೇವರಾಯನದುರ್ಗ ಪ್ರದೇಶಗಳ ರಸ್ತೆಗಳು ತಿರುವುಗಳಿಂದ ಕೂಡಿದ್ದು, ಅಪಘಾತವಲಯಗಳಾಗಿರುತ್ತವೆ ಎಂದು ಜಿಲ್ಲಾಧಿಕಾರಿ ವೈಎಸ್ ಪಾಟೀಲ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷದ ಅಂಗವಾಗಿ ಸಾರ್ವಜನಿಕರು ಮಧ್ಯಪಾನ ಮಾಡಿ ಮತ್ತು ಜಾಲಿ ರೈಡ್ ನೆಪದಲ್ಲಿ ವಾಹನಗಳನ್ನು ಚಾಲನೆ ಮಾಡುವುದರಿಂದ ಮಾರಣಾಂತಿಕ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಈ ಪ್ರದೇಶಗಳು ಸಂರಕ್ಷಿತ ಅರಣ್ಯ ಪ್ರದೇಶಗಳಾಗಿರುವುದರಿಂದ, ಪ್ರವಾಸಿಗರ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.
ಸಾರ್ವಜನಿಕರು ಗುಂಪು ಗುಂಪಾಗಿ ತೆರಳಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿರುವುದರಿಂದ ಡಿ. 31ರಂದು ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆಯವರೆಗೆ ನಿರ್ಬಂಧ ವಿಧಿಸಿರುವುದಾಗಿ ತಿಳಿಸಿದ್ದಾರೆ.
ಇನ್ನು ಈ ಅವಧಿಯಲ್ಲಿ ಸ್ಥಳೀಯರು ಇದೇ ಮಾರ್ಗದಲ್ಲಿ ಸಂಚರಿಸಬಹುದು. ಆದರೆ, ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸುವಂತಿಲ್ಲ ಎಂದು ಹೇಳಲಾಗಿದೆ.
Advertisement