ಕಡಲ್ಕೊರೆತಕ್ಕೆ ತಾತ್ಕಾಲಿಕ ಪರಿಹಾರ ಕಲ್ಪಿಸಲು ಸೂಚನೆ; ಕೆರೂರು ಪಟ್ಟಣದಲ್ಲಿ ಪೊಲೀಸರಿಂದ ಭದ್ರತೆ: ಸಿಎಂ ಬೊಮ್ಮಾಯಿ

ಕರಾವಳಿ, ಕೊಡಗು, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗೆ ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯನಿರತವಾಗುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಕರಾವಳಿ, ಕೊಡಗು, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗೆ ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯನಿರತವಾಗುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣವಿರುತ್ತದೆ. ಮೈಸೂರಿನ ಎನ್ ಡಿಆರ್ ಎಫ್ ತಂಡವನ್ನು ಕೊಡಗಿಗೆ ನೇಮಿಸಲಾಗುತ್ತಿದೆ. ಮಂಗಳೂರಿನಲ್ಲಿ ಎನ್ ಡಿಆರ್ ಎಫ್ ತಂಡವಿದ್ದು ಎಸ್ ಡಿಆರ್ ಎಫ್ ತಂಡ ಕೂಡ ಇರುತ್ತದೆ. ಕಾರವಾರ ಮತ್ತು ಉಡುಪಿಯಲ್ಲಿ ಕೂಡ ನೇಮಿಸಲಾಗಿದೆ. ಕಾರವಾರ, ಉಡುಪಿ, ಮಂಗಳೂರಿನಲ್ಲಿ ಆಗುತ್ತಿರುವ ಕಡಲ ಕೊರೆತಕ್ಕೆ ತಾತ್ಕಾಲಿಕ ಪರಿಹಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೊಡಗು ಜಿಲ್ಲೆಯಲ್ಲಿ ಭೂಕುಸಿತವಾಗುವ ಪ್ರದೇಶಗಳಲ್ಲಿ ಜನವಸತಿಯಿದ್ದರೆ ಅಲ್ಲಿರುವವರನ್ನು ಸ್ಥಳಾಂತರ ಮಾಡಲು ಸೂಚಿಸಲಾಗಿದೆ. ರಸ್ತೆಗಳನ್ನು ಸಹ ತೆರವು ಮಾಡಲು ಸೂಚಿಸಲಾಗಿದೆ. ಸಿಬ್ಬಂದಿ, ಕಾರ್ಮಿಕರು ಅದಕ್ಕೆ ಯಂತ್ರಗಳು, ಸಾಧನಗಳನ್ನು ಸಿದ್ಧತೆ ಮಾಡಿಕೊಂಡು ಮಳೆಯ ನಡುವೆಯೂ ಕಾರ್ಯನಿರ್ವಹಿಸುತ್ತಿದ್ದಾರೆ, ಮಳೆ ಹೆಚ್ಚಾಗಿ ಇರುವ ಕಡೆ ಹಾನಿಯಾಗಿರುವ ಕಡೆಯೆಲ್ಲಾ ಜಿಲ್ಲಾಧಿಕಾರಿಗಳಿಗೆ ಖುದ್ದಾಗಿ ಹೋಗಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದೇನೆ ಎಂದರು.

ಕೆರೂರಿನಲ್ಲಿ ನಿಷೇಧಾಜ್ಞೆ ಜಾರಿ: ನಿನ್ನೆ ಸಾಯಂಕಾಲ ವೈಯಕ್ತಿಕ ಜಗಳದಿಂದ ಎರಡು ಕೋಮುಗಳ ಮಧ್ಯೆ ಘರ್ಷಣೆ ನಡೆದು ಪರಿಸ್ಥಿತಿ ಅಲ್ಲಿ ಉದ್ವಿಗ್ನಗೊಂಡಿತ್ತು, ಪೊಲೀಸರು ಅದನ್ನು ನಿಯಂತ್ರಣ ಮಾಡಿದ್ದು ಸದ್ಯ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಘರ್ಷಣೆಗೆ ಕಾರಣರಾದವರನ್ನು ಬಂಧಿಸಲಾಗಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟು ಕೆಲಸವನ್ನು ಮಾಡಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೆಕ್ಷನ್ 144ನ್ನು ಜಾರಿ ಮಾಡಲಾಗಿದೆ ಎಂದರು.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಕನ್ನಡ ನಾಡಿನ ಜನತೆಗೆ ಸಂತಸವನ್ನುಂಟುಮಾಡಿದೆ. ಗೌರವವನ್ನುಂಟುಮಾಡಿದೆ. ವೀರೇಂದ್ರ ಹೆಗ್ಗಡೆಯವರು ಕಳೆದ ನಾಲ್ಕೈದು ದಶಕಗಳಿಂದ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಮಾತ್ರವಲ್ಲದೆ ಅವರು ಮಾಡಿರುವ ಕೆಲಸಗಳು, ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳು, ಕೃಷಿ ಯಂತ್ರೋಪಕರಣಗಳ ನಿರ್ಮಾಣ, ಕುಡಿಯುವ ನೀರು, ಸ್ವಚ್ಛತಾ ಕಾರ್ಯ ಇತ್ಯಾದಿ ಕೆಲಸಗಳು ಇಡೀ ಕರ್ನಾಟಕಕ್ಕೆ ಉಪಯೋಗವಾಗಿದೆ ಮತ್ತು ದೇಶಕ್ಕೆ ಮಾದರಿಯಾಗಿದೆ. ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ಸಹಾಯ, ವಿಜ್ಞಾನ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಅವರು ಮಾಡಿರುವ ಕೆಲಸಗಳನ್ನು ಗುರುತಿಸಿ ಪ್ರಧಾನ ಮಂತ್ರಿಯವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಅವರು ರಾಜ್ಯಸಭೆಯಲ್ಲಿ ಚರ್ಚೆ ಮಾಡಿ ದೇಶವನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗುತ್ತಾರೆ, ಅವರಿಂದ ದೇಶಕ್ಕೆ ಲಾಭವಾಗಲಿದೆ ಎಂದು ಭಾವಿಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com