ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ಮುಸ್ಲಿಮರು ನಮಾಜ್ ಮಾಡಲು ಅವಕಾಶ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬೆಂಗಳೂರಿನ ರಸ್ತೆಗಳಲ್ಲಿ, ಮಸೀದಿಯ ಹೊರಗಡೆ, ಟ್ರಾಫಿಕ್ ಸಿಗ್ನಲ್ಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶವಿಲ್ಲ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬಕ್ರೀದ್ ಜಗತ್ತಿನಾದ್ಯಂತ ಮುಸ್ಲಿಮರಿಗೆ ಅತ್ಯಂತ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ.
ಜುಲೈ 10ಕ್ಕೆ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ಸಂಚಾರ ದಟ್ಟಣೆ ಸಮಸ್ಯೆ ಉಂಟಾಗುವಂತೆ ಹಬ್ಬದ ಪ್ರಾರ್ಥನೆ ಮಾಡುವ ಹಾಗಿಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಹಬ್ಬದ ಪ್ರಾರ್ಥನೆಗೆ ರಸ್ತೆ ಬಂದ್ ಮಾಡುವುದು. ಟ್ರಾಫಿಕ್ ಸಿಗ್ನಲ್ ನಲ್ಲಿ ಚಾಪೆ ಹಾಸುವುದಕ್ಕೆ ಅವಕಾಶ ಇಲ್ಲ.
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಸದ್ಯಕ್ಕೆ ಈ ಸ್ಥಳದಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ. ಬಕ್ರೀದ್ ಹಬ್ಬದ ಹಿನ್ನೆಲೆ ಈ ಸ್ಥಳದಲ್ಲಿ ಜಾನುವಾರು ಮಾರಾಟ ಹೆಚ್ಚಾಗಿದೆ. ಇದರಿಂದ ತ್ಯಾಜ್ಯವು ಶೇಖರಣೆ ಆಗಿದ್ದು, ಸದ್ಯಕ್ಕೆ ಬಿಬಿಎಂಪಿ ತೆರವು ಮಾಡುವ ಕೆಲಸ ಮಾಡುವುದಿಲ್ಲ ಎಂದೂ ಪಾಲಿಕೆ ಇದೇ ವೇಳೆ ಸ್ಪಷ್ಟಪಡಿಸಿದೆ.
ಬಕ್ರೀದ್ ವೇಳೆ ನಡೆಯುವ ಪ್ರಾಣಿ ಬಲಿಗೆ ಸಂಬಂಧಿಸಿದಂತೆ ಬಿಬಿಎಂಪಿಯು ಪ್ರಕಟಣೆ ಹೊರಡಿಸಿದ್ದು, ಹೊಸ ಕಾಯ್ದೆ ಜಾರಿಯಾದ ನಂತರ ಹಸು, ಒಂಟೆ, ಎಮ್ಮೆ ಹತ್ಯೆ ಮಾಡುವಂತಿಲ್ಲ ಎಂದು ಬೆಂಗಳೂರು ಡಿಸಿ ಸ್ಪಷ್ಟಪಡಿಸಿದ್ದಾರೆ.
ಎಮ್ಮೆ, ಹಸು ಅಥವಾ ಒಂಟೆಗಳ ಸಾಗಣೆಯನ್ನು ನಿಲ್ಲಿಸಲು ನಗರದ ಹಲವೆಡೆ ಕಾರ್ಯಕರ್ತರು, ಪಶುವೈದ್ಯರು ಮತ್ತು ಪೊಲೀಸರನ್ನು ಒಳಗೊಂಡ ವಿಶೇಷ ತಂಡ ರಚಿಸಲಿದ್ದು, ನಗರದ್ಯಾಂತ ಸಾಗಣೆ ಬಗ್ಗೆ ಪರಿಶೀಲನೆ ನಡೆಸುತ್ತದೆ.
Advertisement