ನದಿ ಪ್ರವಾಹಕ್ಕೆ ಶಾಶ್ವತ ಯೋಜನೆ, ಗ್ರಾಮೀಣ ಭಾಗದಲ್ಲಿ ಕಾರ್ಯಪಡೆ: ಮುಖ್ಯಮಂತ್ರಿ ಬೊಮ್ಮಾಯಿ
ಹುಬ್ಬಳ್ಳಿ: ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಸಂಬಂಧಿಸಿದ ಜಿಲ್ಲೆಗಳ ಡಿಸಿಗಳು ನಿರಂತರ ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ. ನೀರಿನ ಪ್ರಮಾಣಕ್ಕೆ ತಕ್ಕಂತೆ ಬಳಕೆಗೆ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದರು. ಬೀದರ್, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಅತಿವೃಷ್ಟಿಯಾಗಿದ್ದು ಈ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು ಎಂದರು.
ಈಗಾಗಲೇ ಎಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಯಲ್ಲಿ ಕಾರ್ಯೋನ್ಮುಖರಾಗಿ ನೆರೆಪೀಡಿತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಗ್ರಾಮೀಣ ಪ್ರದೇಶಗಳಲ್ಲಿ ಸಹ ನಿಗಾವಹಿಸಲು ಟಾಸ್ಕ್ ಫೋರ್ಸ್ ರಚಿಸಲು ಯೋಜಿಸಲಾಗಿದೆ ಎಂದರು.
ತಗ್ಗು ಪ್ರದೇಶಗಳಲ್ಲಿ ಜಲಾವೃತಗೊಳ್ಳುವ ಮನೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ತಾಂತ್ರಿಕ ದೋಷದಿಂದ ಎರಡೂವರೆ ಲಕ್ಷ ಮನೆ ಮಂಜೂರಾತಿ ವಿಳಂಬವಾಗಿತ್ತು. ಈಗ ಅದನ್ನು ಸರಿಪಡಿಸಲಾಗಿದೆ. ಕಚ್ಚಾ ಮನೆಗಳನ್ನು ಪಕ್ಕಾ ಮಾಡಲು ಚಿಂತನೆ ನಡೆದಿದೆ ಎಂದರು.
ಜಂಟಿ ಸರ್ವೆ: ರಾಜ್ಯದಲ್ಲಿ ಬೆಳೆಹಾನಿ ಕುರಿತು ಜಂಟಿ ಸರ್ವೆ ಮಾಡಿ ವರ್ಗೀಕರಣ ಮಾಡಲು ತಿಳಿಸಲಾಗಿದೆ ಎಂದರು.
ಕನ್ನಡಿಗರು ಉದ್ಯಮರಂಗದಲ್ಲಿ ಮುಂದುವರಿಯಬೇಕು: ಹುಬ್ಬಳ್ಳಿಯ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿನ ಕರ್ನಾಟಕ ಮಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದಲ್ಲಿ ಸ್ವಯಂ ಶಿಸ್ತು ತರುವ ಈ ಸಂಸ್ಥೆಗೆ ಎನ್ಎಬಿಎಲ್ ಮಾನ್ಯತೆ ದೊರೆತಿರುವುದು ಸಂತಸ ತಂದಿದೆ ಎಂದರು.
ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು. ಈ ಮೂಲಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ಮುಂದೆ ಬರುವಂತೆ ಮಾಡಬೇಕೆಂದರು. ಧಾರವಾಡ ಮತ್ತು ತುಮಕೂರು ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಶಾಸನಗಳ ತಿದ್ದುಪಡಿ ಅಗತ್ಯವಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ತಿದ್ದುಪಡಿಗಳನ್ನು ತರಲಾಗುವುದು. ಬರುವ ನವೆಂಬರ್ 2 ಹಾಗೂ 3 ರಂದು ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಸ್ಥಳೀಯ ಕನ್ನಡಿಗ ಉದ್ದಿಮೆದಾರರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕು ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ