ಬೆಂಗಳೂರು: ಕಾರಿಗೆ ವೇಗವಾಗಿ ಬಂದ ಆ್ಯಂಬುಲೆನ್ಸ್ ಡಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಬೆಂಗಳೂರು-ಬಳ್ಳಾರಿ ಹೆದ್ದಾರಿಯ ಜಕ್ಕೂರು ಫ್ಲೈ ಓವರ್‌ನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟು, ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:  ಬೆಂಗಳೂರು-ಬಳ್ಳಾರಿ ಹೆದ್ದಾರಿಯ ಜಕ್ಕೂರು ಫ್ಲೈ ಓವರ್‌ನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟು, ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಜಾಲಹಳ್ಳಿ ನಿವಾಸಿ ಎಂಎನ್ ಸಿ ಕಂಪನಿ ಉದ್ಯೋಗಿ ಸಂಜೀವ್‌ ಕುಮಾರ್‌(35) ಮೃತ ಕಾರು ಚಾಲಕ. ಆಟೋ ಚಾಲಕ ಯಾರಬ್‌ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಸಂಜೀವ್‌ ಕುಮಾರ್‌ ಶುಕ್ರವಾರ ರಾತ್ರಿ 9ರ ಸುಮಾರಿಗೆ ಬೆಂಗಳೂರು-ಬಳ್ಳಾರಿ ಹೆದ್ದಾರಿಯ ಜಕ್ಕೂರು ಫ್ಲೈ ಓವರ್‌ನಲ್ಲಿ ಕಾರಿನಲ್ಲಿ ಬರುತ್ತಿದ್ದರು. ಇದೇ ವೇಳೆ ಯಲಹಂಕ ಕಡೆಯಿಂದ ಬೆಂಗಳೂರು ಕಡೆಗೆ ಅತಿವೇಗವಾಗಿ ಬಂದು 108 ಆ್ಯಂಬುಲೆನ್ಸ್‌ ಚಾಲಕನ ನಿಯಂತ್ರಣ ತಪ್ಪಿ ಸಂಜೀವ್‌ ಕುಮಾರ್‌ ಕಾರಿಗೆ ಡಿಕ್ಕಿ ಹೊಡೆದಿದೆ.

ಸಂಜೀವ್‌ ಕುಮಾರ್‌ ಕಾರು ಮುಂದೆ ಹೋಗುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ಕಾರು ಚಾಲಕ ಸಂಜೀವ್‌ ಕುಮಾರ್‌ ಮತ್ತು ಆಟೋ ಚಾಲಕ ಯಾರಬ್‌ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಆದರೆ, ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದರಿಂದ ಸಂಜೀವ್‌ ಕುಮಾರ್‌ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಆ್ಯಂಬುಲೆನ್ಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com