ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಬೊಮ್ಮಾಯಿ ಸಾಂತ್ವಾನ, 25 ಲಕ್ಷ ರೂ. ಚೆಕ್ ವಿತರಣೆ

ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕುಟುಂಬಕ್ಕೆ ಸಾಂತ್ವಾನ ಹೇಳಿ...
ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟಿ
ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕುಟುಂಬಕ್ಕೆ ಸಾಂತ್ವಾನ ಹೇಳಿ,  25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.

ಬಿಜೆಪಿ ಮುಖಂಡನ ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸುಳ್ಯ ತಾಲೂಕಿನ ನೆಟ್ಟೂರು ಗ್ರಾಮಕ್ಕೆ ಭೇಟಿ ನೀಡಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲೂ ಸರ್ಕಾರ ತನಿಖೆ ನಡೆಸುತ್ತಿದೆ. ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರ್ಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇದೆ ಎಂದು ಸಿಎಂ ಬೊಮ್ಮಾಯಿ ಪ್ರವೀಣ್ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಹ ಇದ್ದರು.

ಇದಕ್ಕು ಮುನ್ನ ನೆಟ್ಟೂರಿಗೆ ಹೋಗುವ ದಾರಿ ಮಧ್ಯೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರವೀಣ್ ನೆಟ್ಟಾರು ಹತ್ಯೆಯಾದ ಕ್ಷಣದಿಂದ ದಕ್ಷಿಣ ಕನ್ನಡ ಎಸ್ಪಿ ಜತೆ ಸಂಪರ್ಕದಲ್ಲಿದ್ದೇನೆ. ನಮ್ಮ ಡಿಜಿಪಿಯವರು ಕೇರಳ ಡಿಜಿಪಿ ಜತೆ ಮಾತನಾಡಿದ್ದು, ನಮ್ಮ ಪೊಲೀಸರು ಕಾಸರಗೋಡು ಎಸ್ಪಿ ಜತೆಯೂ ಸಂಪರ್ಕದಲ್ಲಿದ್ದಾರೆ. ಕೊಲೆಗೆ ಕೇರಳದ ಜತೆ ಸಂಪರ್ಕವಿದೆ ಎಂಬ ಪ್ರಾಥಮಿಕ ಮಾಹಿತಿ ಹಿನ್ನೆಲೆಯಲ್ಲಿ ತನಿಖೆಗೆ ನಡೆಯುತ್ತಿದ್ದು, ಕೇರಳ ಪೊಲೀಸರು ಸಹಕಾರ ಕೊಡುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com