ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕರೆ ತನ್ನಿ: ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಸೂಚನೆ

ನವೆಂಬರ್ 11 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನವೆಂಬರ್ 11 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ನವೆಂಬರ್‌ 8ರಂದು ಸುತ್ತೋಲೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರು, ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಂದ ನಿಗದಿತ ಸಂಖ್ಯೆಯ ವಿದ್ಯಾರ್ಥಿಗಳನ್ನು ಕರೆತರಬೇಕೆಂದು ಸೂಚಿಸಿದೆ.

ವಿದ್ಯಾರ್ಥಿಗಳನ್ನು ಕರೆತರಲು ಬಸ್‌ಗಳನ್ನು ನಿಗದಿಪಡಿಸಿದ್ದು, ಅವು ನಿಗದಿತ ಸಮಯಕ್ಕೆ ಸರಿಯಾಗಿ ಸಂಬಂಧಿಸಿದ ಕಾಲೇಜುಗಳಿಂದ ಹೊರಡಲಿವೆ. ಆ ಬಸ್ಸುಗಳಿಗೆ ನೇಮಿಸಿರುವ ನೋಡಲ್‌ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಕ್ಷೇಮವಾಗಿ ಕಾರ್ಯಕ್ರಮಕ್ಕೆ ಕರೆತಂದು ಕಾರ್ಯಕ್ರಮ ಮುಗಿದ ಬಳಿಕ ವಾಪಸ್‌ ಕರೆದೊಯ್ಯಬೇಕು. ತಪ್ಪಿದಲ್ಲಿ ಮುಂದಿನ ಆಗು ಹೋಗುಗಳಿಗೆ ಪ್ರಾಂಶುಪಾಲರೇ ಜವಾಬ್ದಾರರು ಎಂದು ತಿಳಿಸಿದ್ದಾರೆ.

ಮೋದಿ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ನೇತೃತ್ವದಲ್ಲಿ ಜಿಲ್ಲೆಯ ಪಿಯು ಕಾಲೇಜುಗಳ ಪ್ರಾಂಶುಪಾಲರ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಇದರ ಆಧಾರದ ಮೇಲೆ ಪಿಯು ಇಲಾಖೆ ಡಿಡಿಪಿಯು ಈ ಸುತ್ತೋಲೆ ಹೊರಡಿಸಿದ್ದಾರೆ. ಮಾಹಿತಿ ಪ್ರಕಾರ ಸ್ಥಳೀಯ ಜಿಲ್ಲಾ ಪಂಚಾಯಿತಿಯಿಂದಲೇ ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ನಗರದ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ. ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಟರ್ಮಿನಲ್-2 ಲೋಕಾರ್ಪಣೆ ಮಾಡಲಿದ್ದು, ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com