ಮುರುಘಾ ಶ್ರೀ ಪ್ರಕರಣ: ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನ್ಯಾಯಾಂಗ ಬಂಧನ
ಚಿತ್ರದುರ್ಗ: ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರಿಗೆ ಸ್ಥಳೀಯ ಕೋರ್ಟ್ ನವೆಂಬರ್ 28ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಸವರಾಜನ್ ಅವರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಕೆ. ಕೋಮಲಾ ಅವರು, ಬಸವರಾಜನ್ ಹಾಗೂ ಮತ್ತೋರ್ವ ಆರೋಪಿ ಬಸವರಾಜೇಂದ್ರ ಅವರಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಆರೋಪಿ ಶಿವಮೂರ್ತಿ ಮುರುಘಾ ಶರಣರು ಕೂಡ ಜಿಲ್ಲಾ ಕಾರಾಗೃಹದಲ್ಲಿ ಇರುವುದರಿಂದ ತಮ್ಮ ಕಕ್ಷಿದಾರರನ್ನು ಬೇರೆ ಜೈಲಿಗೆ ಕಳುಹಿಸುವಂತೆ ಬಸವರಾಜನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದರೆ, ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದರು.
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀ ಮತ್ತು ಒಂದು ಕಾಲದಲ್ಲಿ ಶ್ರೀಗಳಿಗೆ ಆಪ್ತರಾಗಿದ್ದು, ಈಗ ಬದ್ಧ ವೈರಿಗಳಾಗಿರುವ ಇಬ್ಬರನ್ನೂ ಒಂದೇ ಜೈಲಿನಲ್ಲಿ ಇರಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ