ನಾಳೆ ಬೆಂಗಳೂರು ಕಡಲೆಕಾಯಿ ಪರಿಷೆ: 500ಕ್ಕೂ ಅಧಿಕ ಅಂಗಡಿಗಳು, 5 ಲಕ್ಷಕ್ಕೂ ಹೆಚ್ಚಿನ ಜನರ ಆಗಮನ

ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಗೆ ಕ್ಷಣಗಣನೆ ಆರಂಭವಾಗಿದ್ದು, ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆಗೆ ನಾಳೆ ಚಾಲನೆ ದೊರೆಯಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಗೆ ಕ್ಷಣಗಣನೆ ಆರಂಭವಾಗಿದ್ದು, ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆಗೆ ನಾಳೆ ಚಾಲನೆ ದೊರೆಯಲಿದೆ.

ಬರೋಬ್ಬರಿ ಐದು ದಶಕಗಳ ಕಾಲದ ಇತಿಹಾಸ ಹೊಂದಿರುವ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತುಲಾಭಾರ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಿದ್ದಾರೆ. ನಾಳೆ ಬಸವನಗುಡಿಯಲ್ಲಿ ಸಾಂಸ್ಕೃತಿಕ ಮತ್ತು ಗ್ರಾಮೀಣ ಸೊಗಡು, 5 ದಿನಗಳ ಕಾಲ ಬಸವನ ಗತಕಾಲದ ವೈಭವ ಮರುಕಳಿಸಲಿದೆ. ಸಂಜೆ 6 ಗಂಟೆ ಸುಮಾರಿಗೆ ಪರಿಷೆಯ ಸಂಭ್ರಮ ಆರಂಭವಾಗಲಿದ್ದು, ಸತತ ಐದು ದಿನಗಳ ಕಾಲ ಜಾತ್ರೆ ಜರುಗಲಿದೆ. 

ಪರಿಷೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಹತ್ತು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದೊಡ್ಡ ಗಣಪತಿ ದೇವಸ್ಥಾನದ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿ ಮಾಹಿತಿ ನೀಡಿದ ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಮ್ ರಾಯ್ ಪುರ,ಪೆಂಡಾಲ್ ವ್ಯವಸ್ಥೆ ಹಾಗೂ ಆಸನಗಳ ವ್ಯವಸ್ಥೆ, ಗಣ್ಯ ವ್ಯಕ್ತಿಗಳಿಗೆ, ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತಾದಿಗಳಿಗೆ ದೇವರ ದರ್ಶನವನ್ನು ಪಡೆಯಲು ಹಲವು ಕಡೆ ಎಲ್.ಇ.ಡಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುನ್ನೆಚರಿಕೆ ಕ್ರಮವಾಗಿ ಹಲವು ಕಡೆ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಭಕ್ತಾದಿಗಳಿಗೆ ಮಾಹಿತಿ ನೀಡಲು ಹೋಂ ಗಾರ್ಡ್ಸ್, ಪೋಲೀಸ್ ಇಲಾಖೆ ಹಾಗೂ ಧ್ವನಿವರ್ಧಕಗಳನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

ತುರ್ತು ಸಂದರ್ಭದಲ್ಲಿ ಮಕ್ಕಳು, ವೃದ್ಧರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ವ್ಯಾಪಾರಸ್ಥರಿಗೆ ಸುಮಾರು 2 ಸಾವಿರ ತಾತ್ಕಾಲಿಕ ಅಂಗಡಿಗಳನ್ನು ತೆರೆಯಲು ಪಾದಚಾರಿ ಬದಿಯಲ್ಲಿ ಟ್ರಾಫಿಕ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಸುಮಾರು 1 ಕಿ.ಮೀ ಸರಹದ್ದು ವ್ಯಾಪ್ತಿಯಲ್ಲಿ ವಿದ್ಯುತ್ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ. ಮುನ್ನೆಚರಿಕೆ ಸಲುವಾಗಿ ಅಗ್ನಿಶಾಮಕ ವಾಹನ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ವಿದ್ಯುತ್ ಸರಬರಾಜು ಸಮರ್ಪಕವಾಗಿ ನಿರ್ವಹಿಸಲು ಬೆಸ್ಕಾಂ ಇಲಾಖೆಯಿಂದ ವ್ಯವಸ್ಥೆ ಮಾಡಲಾಗಿದೆ ಎಂದರು. ಕಾನೂನು ಸುವ್ಯವಸ್ಥೆ ಕಾಪಾಡಲು ಸುಮಾರು 500 ರಿಂದ 600 ಪೋಲೀಸ್ ಸಿಬ್ಬಂದಿಗಳನ್ನು ಇಲಾಖೆ ವತಿಯಿಂದ ನಿಯೋಜಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಹಲವು ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com