ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ಮತೀಯ ಶಕ್ತಿಗಳು ಶಾಂತಿ, ಸುವ್ಯವಸ್ಥೆ ಕದಡಲು ಯತ್ನಿಸುತ್ತಿವೆ: ನಳಿನ್ ಕುಮಾರ್ ಕಟೀಲ್

ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಮಂಗಳೂರು: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. ಮೂಲಭೂತವಾದಿಗಳ ಇಂತಹ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಅಥವಾ ನೆರವು ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ.

ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ. ಕರ್ನಾಟಕದಲ್ಲಿ ನಮ್ಮ ಪೊಲೀಸ್ ಇಲಾಖೆ ಮಂಗಳೂರಿನ ಸ್ಫೋಟದ ಮೂಲ ಪತ್ತೆಹಚ್ಚುವಲ್ಲಿ ನಿರತವಾಗಿದ್ದು, ಕೇಂದ್ರದಿಂದ ಅಗತ್ಯ ನೆರವು ನೀಡಲಾಗಿದೆ.

ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು. ಕರ್ನಾಟಕದಲ್ಲಿ ಭಯೋತ್ಪಾದಕ ಕೃತ್ಯ ಮಾಡುವ ಮೂಲಕ ರಾಜ್ಯಕ್ಕೆ ಕೆಟ್ಟ ಹೆಸರು ತರುವ ಮತಾಂಧರ ಪ್ರಯತ್ನ ಜಾರಿಯಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ ಮಂಗಳೂರಿನ ಬಾಂಬ್ ಸ್ಫೋಟದ ತನಿಖೆ ನಡೆಸಲಿದ್ದು, ಇದರ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ನೆರವಾಗಲಿದೆ. ಬಾಂಬ್ ಸ್ಫೋಟದ ಹಿಂದೆ ಅಂತರಾಜ್ಯ ದೇಶದ್ರೋಹಿಗಳ ಕೈವಾಡ ಪತ್ತೆ ಹಚ್ಚಲು ಎನ್ಐಎ ಕಾರ್ಯತತ್ಪರವಾಗಿದೆ. ನಮ್ಮ ಉನ್ನತ ಪೊಲೀಸ್ ಅಧಿಕಾರಿಗಳು ಸಹಕರಿಸುತ್ತಿದ್ದಾರೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com