ಬೆಂಗಳೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಇದೇ ತಿಂಗಳ 30 ರಂದು ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಗಡಿ ವಿವಾದ ಹಾಗೂ ಕರ್ನಾಟಕದಿಂದ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಮುಖ್ಯಮಂತ್ರಿ ಚರ್ಚೆ ನಡೆಸುವ ಸಾಧ್ಯತೆಯಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಹಿರಿಯ ವಕೀಲರ ಭೇಟಿಗೆ ಅಪಾಯಿಂಟ್ಮೆಂಟ್ ತೆಗೆದುಕೊಳ್ಳಲಾಗಿದೆ. ದೆಹಲಿ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಕೂಡಾ ಭೇಟಿಯಾಗುತ್ತೇನೆ. ಅವರ ಸಮಯ ಕೇಳಲಾಗಿದ್ದು, ಮಾತುಕತೆಗೆ ಅವರು ಅನುಮತಿ ನೀಡುವ ಭರವಸೆಯಿದೆ ಎಂದರು. ಜೆಪಿ ನಡ್ಡಾ ಅವರೊಂದಿಗೆ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕೇಂದ್ರ ವಾಣಿಜ್ಯ ಖಾತೆ ರಾಜ್ಯ ಸಚಿವ ಪಿಯೂಷ್ ಗೋಯೆಲ್ ಅವರೊಂದಿಗೆ ಸಭೆ ಇರುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಗಡಿಯಲ್ಲಿ ಮಹಾರಾಷ್ಟ್ರ ಪರ ಘೋಷಣೆಗಳೊಂದಿಗೆ ಕರ್ನಾಟಕ ಬಸ್ ಗಳಿಗೆ ಬಣ್ಣ ಬಳಿಯುವ ಘಟನೆಗಳನ್ನು ಖಂಡಿಸಿರುವ ಮುಖ್ಯಮಂತ್ರಿ, ಇಂತಹ ಘಟನೆಗಳಿಗೆ ಕೊನೆಯಾಡಲು ಮಹಾರಾಷ್ಟ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ರಾಜ್ಯಗಳ ನಡುವೆ ಒಡಕನ್ನುಂಟು ಮಾಡಲಿದೆ. ಮಹಾರಾಷ್ಟ್ರ ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕಿದೆ ಎಂದು ಬೊಮ್ಮಾಯಿ ಹೇಳಿದರು.
ಮುಂದಿನ ವರ್ಷ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಹೊಸ ಮುಖಗಳಿಗೆ ಸ್ಥಾನ ಕಲ್ಪಿಸಲು ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಒತ್ತಡ ಕೆಲ ದಿನಗಳಿಂದಲೂ ಕೇಳಿಬರುತ್ತಿದ್ದು, ಆರು ಸಚಿವ ಸ್ಥಾನ ಭರ್ತಿ ಅಥವಾ ಕೆಲವರನ್ನು ಕೈ ಬಿಟ್ಟು ಅಷ್ಟೇ ಸಂಖ್ಯೆಯ ಹೊಸಬರನ್ನು ಸೇರ್ಪಡೆ ಮಾಡಿಕೊಳ್ಳಲು ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದೆ ಎಂದು ಕೆಲವೊಂದು ವರದಿಗಳು ಹೇಳಿವೆ.
ಈ ಮಧ್ಯೆ, ಮಹಾರಾಷ್ಟ್ರದೊಂದಿಗೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟಕ್ಕೆ ರಾಜ್ಯ ಮುಂದಾಗಿದ್ದು, ಹಿರಿಯ ವಕೀಲ ರೋಹಟಗಿ ಜೊತೆಗಿನ ಭೇಟಿಯಲ್ಲಿ ಮುಖ್ಯಮಂತ್ರಿ ಈ ಕುರಿತು ಚರ್ಚೆ ನಡೆಸಲಿದ್ದಾರೆ. ಶನಿವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಹಿರಿಯ ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ಕೂಡಾ ನಡೆದಿತ್ತು.
Advertisement