ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ವಸತಿ ಕಟ್ಟಡ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅನುಮತಿ ನೀಡಿದ್ದಕ್ಕೆ ಆಘಾತ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಸಂಬಂಧ ತನಿಖೆ ನಡೆಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಗುರುವಾರ ಸೂಚನೆ ನೀಡಿದೆ.
ಪ್ರಕರಣದಲ್ಲಿ ನಡೆದಿರುವ ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸಲು ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಕೊಡಿಗೆಹಳ್ಳಿಯ ನಿವಾಸಿ ಅಶ್ವತ್ಥ ನಾರಾಯಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಯಲಹಂಕ ತಹಸೀಲ್ದಾರ್ ಅನಿಲ್ ಕುಮಾರ್ ವರದಿ ಸಲ್ಲಿಸಿ, ಕೊಡಿಗೆಹಳ್ಳಿಯ ಸರ್ವೇ ನಂಬರ್ 209/3, 209/4 ಮತ್ತು 209/7 ಮತ್ತು ಕೋತಿ ಹೊಸಹಳ್ಳಿಯ ಸರ್ವೇ ನಂಬರ್ 39ರಲ್ಲಿನ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಖಾಸಗಿ ಕಂಪನಿಗಳು ವಸತಿ ಕಟ್ಟಡ ನಿರ್ಮಿಸಿವೆ. ಅನಧಿಕೃತ ಒತ್ತುವರಿದಾರರಿಗೆ ಒತ್ತುವರಿ ತೆರವುಗೊಳಿಸಲು ನೋಟಿಸ್ ಜಾರಿಗೊಳಿಸಿದ್ದು, ಕೆಲ ಒತ್ತುವರಿಯನ್ನೂ ಈಗಾಗಲೇ ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ತಹಸೀಲ್ದಾರ್ ಅವರ ನೋಟಿಸ್ಗೆ ಒತ್ತುವರಿದಾರರಿಗೆ ನೋಟಿಸ್ ಪ್ರತಿಕ್ರಿಯೆ ಸಲ್ಲಿಸಬೇಕು. ಒತ್ತುವರಿದಾರರ ಅಹವಾಲು ಆಲಿಸಿದ ನಂತರ ತಹಸೀಲ್ದಾರ್ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ದೇಶಿಸಿದೆ.
ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಎನ್ಟಿಐ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ವಸತಿ ಕಟ್ಟಡ ನಿರ್ಮಿಸಿದೆ. ಇದಕ್ಕೆ ಬಿಬಿಎಂಪಿ ಅಧಿಕಾರಿಗಳಳೇ ನಕ್ಷೆ ಮಂಜೂರು ಮಾಡಿದ್ದಾರೆ. ಕಟ್ಟಡಕ್ಕೆ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸಲಾಗಿದೆ. ಇದು ಅಧಿಕಾರಗಳ ದಿವ್ಯ ನಿರ್ಲಕ್ಷ್ಯ ಹಾಗೂ ಸರ್ಕಾರಿ ಪ್ರಾಧಿಕಾರಗಳ ನಡುವೆ ಸೂಕ್ತ ಸಹಕಾರ ಇಲ್ಲದಿರುವುದನ್ನು ಪ್ರತಿಬಿಂಬಿಸುತ್ತದೆ. ಹಾಗಾಗಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ನಕ್ಷೆ ಮಂಜೂರಾತಿ ನೀಡಿರುವ ಅಧಿಕಾರಿಗಳ ವಿಚಾರಣೆ ನಡೆಸಬೇಕು. ಪ್ರಕರಣ ಕುರಿತ ಎಲ್ಲ ದಾಖಲೆಗಳನ್ನು ಪರಿಶೀಲಿಸಬೇಕು. ಅಧಿಕಾರಿಗಳು ತಪ್ಪು ಎಸಗಿರುವುದನ್ನು ಗಮನಿಸಿದಲ್ಲಿ ಆ ಕುರಿತು ನಾಲ್ಕು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
Advertisement