ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಕ್ಷಿಣ ಬೆಂಗಳೂರು ಘಟಕದ ಮುಖಂಡ ಎನ್.ಆರ್.ರಮೆಶ್ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ ಪ್ರಕರಣ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಿಎಂ ಬೊಮ್ಮಾಯಿಯವರಿಗೆ ದೂರು ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಚೆಕ್ ಮೂಲಕ 1.30 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಅವರು ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳ ಸಮೇತ ಆರೋಪ ಮಾಡಿ, ಕಿಂಗ್ಸ್ಕೋರ್ಟ್ನ ಎಲ್.ವಿವೇಕಾನಂದ ಎನ್ನುವವರಿಂದ ಸಿದ್ದರಾಮಯ್ಯ 1.30 ಕೋಟಿ ರೂಪಾಯಿ ಲಂಚ ಪಡೆದಿದ್ದರು. ಲಂಚದ ಹಣ ಸಂದಾಯವಾದ ನಂತರವೇ ಅವರು 2014ರಲ್ಲಿ ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ ವಿವೇಕಾನಂದ ಅವರನ್ನು 3 ವರ್ಷಗಳ ಅವಧಿಗೆ ನೇಮಿಸಿದರು ಎಂದು ಆರೋಪಿಸಿದ್ದಾರೆ.
ವಿವೇಕಾನಂದ ಅವರಿಂದ ತಾವು ಸಾಲ ಪಡೆದಿರುವುದಾಗಿ ಸಿದ್ದರಾಮಯ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ಕೊಟ್ಟಿದ್ದರು. ಆದರೆ ಇದು ಸಾಲವಾಗಿರಲಿಲ್ಲ. ಕೇಂದ್ರ ಗೃಹ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ ಯಾರಿಗಾದರೂ ಯಾವುದಾದರೂ ಹುದ್ದೆ ನೀಡುವುದಕ್ಕೆ ಪ್ರತಿಯಾಗಿ ಉಡುಗೊರೆ ಅಥವಾ ಚೆಕ್ ಪಡೆಯುವಂತಿಲ್ಲ. ಈ ಸಂಬಂಧ ಸಿದ್ದರಾಮಯ್ಯ ವಿರುದ್ಧ ನಾಳೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಹೇಳಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಾಲಂ 7, 8, 9, 10, 13ರ ಅಡಿಯಲ್ಲಿ ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಂದ ಹಣ ಪಡೆದಿರುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ಸ್ಥಾನದ ದುರುಪಯೋಗ, ಭ್ರಷ್ಟಾಚಾರ ಹಾಗೂ ವಂಚನೆ ಪ್ರಕರಣ ದಾಖಲಿಸುತ್ತೇವೆ. ಸಿದ್ದರಾಮಯ್ಯ ವಿರುದ್ಧ ಸಿಬಿಐ, ಸಿಐಡಿ, ನ್ಯಾಯಾಂಗ ತನಿಖೆ ನಡೆಸಬೇಕು. ಹುದ್ದೆಗೆ ಪ್ರತಿಯಾಗಿ ಕಿಕ್ಬ್ಯಾಕ್ ಪಡೆದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆಯಲಾಗಿದೆ. ಈ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸಬೇಕೆಂದು ರಮೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ಸರ್ಕಾರಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ವಿರುದ್ಧ ಎನ್.ಆರ್.ರಮೆಶ್ ಅಕ್ಟೋಬರ್ 12ರಂದು ಲೋಕಾಯುಕ್ತರಿಗೆ ದೂರು ನೀಡಿದ್ದರು. ಖಾಸಗಿ ಬಿಲ್ಡರ್ ಅಶೋಕ್ ಧಾರಿವಾಲ್ ಎಂಬುವವರಿಗೆ ಕಾನೂನುಬಾಹಿರವಾಗಿ ಭೂಮಿಯನ್ನು ಡಿ-ನೊಟಿಫೈ ಮಾಡಿಕೊಡಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಭೂಮಿಯನ್ನು ಅವರು ಖರೀದಿಸಿದ್ದರು ಎಂದು ಹೇಳಲಾಗಿದೆ.
ನಿಯಮಗಳ ಪ್ರಕಾರ ಈ ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Advertisement