ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಜ್ಯದಲ್ಲಿ ಯೋಗಥಾನ್; ಗಿನ್ನೆಸ್ ರೆಕಾರ್ಡ್ ಮಾಡಲು ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದದಂದು ರಾಜ್ಯದಲ್ಲಿ 5 ಲಕ್ಷ ಜನರು ಏಕಕಾಲದಲ್ಲಿ ಯೋಗ ಮಾಡಲಿದ್ದಾರೆ. ಈ ಮೂಲಕ ಗಿನ್ನೆಸ್ ರೆಕಾರ್ಡ್ ಮಾಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು ಮುಂದಾಗಿದ್ದಾರೆ. 
ಸಚಿವ ಡಾ.ನಾರಾಯಣಗೌಡ
ಸಚಿವ ಡಾ.ನಾರಾಯಣಗೌಡ
Updated on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದದಂದು ರಾಜ್ಯದಲ್ಲಿ 5 ಲಕ್ಷ ಜನರು ಏಕಕಾಲದಲ್ಲಿ ಯೋಗ ಮಾಡಲಿದ್ದಾರೆ. ಈ ಮೂಲಕ ಗಿನ್ನೆಸ್ ರೆಕಾರ್ಡ್ ಮಾಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು ಮುಂದಾಗಿದ್ದಾರೆ. 

ರೋಗ ಮುಕ್ತ ಕರ್ನಾಟಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಹಮ್ಮಿಕೊಂಡಿರುವ ಯೋಗಥಾನ್ ಯಶಸ್ವಿಗೊಳಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದ್ದಾರೆ.

ಇಂದು ವಿಕಾಸಸೌಧದಿಂದ ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಸೆಪ್ಟೆಂಬರ್ 17 ರಂದು ನಡೆಯಲಿರುವ ಯೋಗಾಥಾನ್ ಕಾರ್ಯಕ್ರಮದ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದುಕೊಂಡರು. ರೋಗ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಯೋಗಾಥಾನ್-2022ನ್ನು ಅವರಿಗೆ ಮೀಸಲಿಡಲು ಹಾಗೂ  ಗಿನ್ನೆಸ್ ರೆಕಾರ್ಡ್ ಮಾಡಲು ನಿರ್ಧರಿಸಲಾಗಿದೆ. ಏಕಕಾಲದಲ್ಲಿ ಐದು ಲಕ್ಷ ಜನರು ಯೋಗಾಸನ ಮಾಡಲಿದ್ದು ಅದಕ್ಕೆ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕೂಡಲೇ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ರಚಿಸಿ
ಮುಖ್ಯಮಂತ್ರಿಗಳ ಕನಸಿನ ಯೋಜನೆಯಾದ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ತ್ವರಿತವಾಗಿ ರಚನೆಗೊಳಿಸುವಂತೆ ಸಿಇಒಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆ ಮಾಡಬೇಕು. ಒಂದು ತಿಂಗಳಿನಲ್ಲಿ ಎಲ್ಲಾ ಪಂಚಾಯತ್‌ಗಳಲ್ಲಿ ಸಂಘ ರಚಿಸಿ, ನೋಂದಣಿ ಮಾಡಿಸಬೇಕು. ಸಂಘ ನೋಂದಣಿಯಾದ ತಕ್ಷಣವೇ 10 ಸಾವಿರ ಬಿಡುಗಡೆ ಮಾಡಲಾಗುವುದು. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸಚಿವ ಡಾ.ನಾರಾಯಣಗೌಡ ಗಡುವು ನೀಡಿದರು.

ಇದೇ ವೇಳೆ ಕ್ರೀಡಾ ಅಂಕಣ ನಿರ್ಮಾಣ ಅನುಷ್ಠಾನದ ಪ್ರಗತಿ ಬಗ್ಗೆಯೂ ಸಚಿವ ಡಾ.ನಾರಾಯಣಗೌಡ ಅವರು ಮಾಹಿತಿ ಪಡೆದರು. ನರೇಗಾ ಮೂಲಕ 504 ಕೋಟಿ ವೆಚ್ಚದಲ್ಲಿ ಪ್ರತಿಗ್ರಾಮ ಪಂಚಾಯತ್‌ನಲ್ಲಿ ಕ್ರೀಡಾ ಅಂಕಣ ನಿರ್ಮಿಸಲು ಸೂಚಿಸಲಾಗಿದೆ. ಕ್ರೀಡಾ ಅಂಗಣ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಿಸಿದ್ದು, ಇದು ಸರ್ಕಾರದ ಮಹತ್ವದ ಯೋಜನೆಯಾಗಿದೆ. ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಸೂಕ್ತ ತರಬೇತಿ ಸಿಗಬೇಕು ಎಂಬ ನಿಟ್ಟಿನಲ್ಲಿ ಈ ಕ್ರೀಡಾಂಗಣ ಯೋಜನೆಯನ್ನು ಘೋಷಿಸಲಾಗಿದೆ. ಎಲ್ಲಾ ಕಡೆ ಶೀಘ್ರದಲ್ಲೇ ಕ್ರೀಡಾಂಗಣಗಳನ್ನು ನಿರ್ಮಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com