ವಿಧಾನಸಭೆ ಅಧಿವೇಶನ: ಮಳೆ, ಬೆಂಗಳೂರು ಪ್ರವಾಹದ ಕುರಿತು 3 ದಿನ ಚರ್ಚೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಮತ್ತು ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಮಂಗಳವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.
ಮಳೆಯ ಚಿತ್ರ
ಮಳೆಯ ಚಿತ್ರ
Updated on

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಮತ್ತು ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಮಂಗಳವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ ನಾಯಕ ವೆಂಕಟರಾವ್‌ ನಾಡಗೌಡ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಿದ್ದರು. ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಮಂಗಳವಾರ ನಿಯಮ 69 ಅಡಿ ವಿಷಯವನ್ನು ಪ್ರಸ್ತಾಪಿಸಲಿದೆ. ಆದರೆ, ಬೇರೆ ನಿಯಮದಡಿ ಚರ್ಚೆ ನಡೆಸಲು ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ವ್ಯವಹಾರ ಸಲಹಾ ಸಮಿತಿಯಲ್ಲಿ (ಬಿಎಸಿ) ಸರ್ಕಾರವು ಪ್ರವಾಹದ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಹೆಚ್ಚಿನ ಶಾಸಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಬಯಸಿದರೆ ಇನ್ನೂ ಒಂದು ದಿನ ವಿಸ್ತರಣೆಯೊಂದಿಗೆ ಎರಡು ದಿನಗಳ ಚರ್ಚೆಗೆ ಸರ್ಕಾರ ಒಪ್ಪಿಗೆ ನೀಡಿದೆ.

‘ಮಳೆ ಮತ್ತು ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಜನ ಮೃತಪಟ್ಟಿದ್ದಾರೆ. ಆದ್ಯತೆಯ ಮೇರೆಗೆ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬೇಕು’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಮಳೆನೀರು ಚರಂಡಿ ನಿರ್ಮಾಣಕ್ಕೆ ಅನುಮತಿ ನೀಡಲಾಯಿತು ಎಂದು ಹೇಳಿದೆ.

ಅಧಿವೇಶನದಲ್ಲಿ ಸರಕಾರ 15 ವಿಧೇಯಕಗಳನ್ನು ಮಂಡಿಸಲು ಮುಂದಾಗಿದ್ದು, ಪ್ರತಿಪಕ್ಷದ ಸದಸ್ಯರು ಎರಡಕ್ಕಿಂತ ಹೆಚ್ಚು ಶಾಸನಗಳನ್ನು ಮಂಡಿಸಬಾರದು ಮತ್ತು ಸರಿಯಾದ ಚರ್ಚೆಗೆ ಸಾಕಷ್ಟು ಸಮಯ ನೀಡಬೇಕು ಎಂದು ಹೇಳಿದರು. ಕರ್ನಾಟಕ ಭೂಕಂದಾಯ ಕಾಯ್ದೆ, ಬೆಂಗಳೂರು ಸಾರಿಗೆ ಪ್ರಾಧಿಕಾರ ಸ್ಥಾಪನೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ ತರುವ ಮಸೂದೆಗಳು ಮಂಡನೆಯಾಗುವ ಸಾಧ್ಯತೆಯಿದೆ.

ಏತನ್ಮಧ್ಯೆ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ಅವ್ಯವಹಾರ, ಗುತ್ತಿಗೆದಾರರ ಸಂಘದ ಆರೋಪದಂತೆ 40 ಪರ್ಸೆಂಟ್ ಕಮಿಷನ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಸಹಾಯ ಮಾಡಲು ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಸಜ್ಜಾಗಿದ್ದಾರೆ.

ಇತ್ತೀಚೆಗೆ ನಿಧನರಾದ ಸಚಿವ ಉಮೇಶ ಕತ್ತಿ, ಬ್ರಿಟನ್ ರಾಣಿ ಎಲಿಜಬೆತ್, ಮಾಜಿ ಸಚಿವರಾದ ಎಂ.ರಘುಪತಿ, ಪ್ರಭಾಕರ ರಾಣೆ, ಸಿ.ಯಾದವರಾವ್‌, ಮಾಜಿ ಶಾಸಕರಾದ ಕೆ. ಕೆಂಪೇಗೌಡ, ಜಿ.ವಿ.ಶ್ರೀರಾಮರೆಡ್ಡಿ, ಸಿ.ಎಂ.ದೇಸಾಯಿ, ಎ.ಜಿ.ಕೊಡ್ಗಿ, ಈಶಣ್ಣ ಗುಳಗಣ್ಣನವರ, ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ಕಲಾಪವನ್ನು ಮುಂದೂಡಲಾಯಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com