ಬೆಂಗಳೂರು: ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಸಭೆಯಲ್ಲಿ ಎಲ್ಲರೂ ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ಸರ್ಕಾರ ಉತ್ತಮ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ. ಪ್ರತಿಯೊಂದು ಸಮುದಾಯಕ್ಕೂ ಸಂವಿಧಾನ ಬದ್ಧವಾದ ನ್ಯಾಯ ಒದಗಿಸಿಕೊಡಲು ಸರ್ಕಾರ ಬದ್ದವಾಗಿದೆ ಎಂದಿದ್ದಾರೆ.
ಇದು ಕಾನೂನಿನ ವಿಷಯವಾಗಿದ್ದು, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಂವಿಧಾನದ ಚೌಕಟ್ಟಿನೊಳಗೆ ಅನುಷ್ಠಾನ ಮಾಡಬೇಕಾಗಿರುವ ಕಾರಣ, ತುಸು ಕಾಲಾವಕಾಶ ಬೇಕಾಗುತ್ತದೆ.ನುಡಿದಂತೆ ನಡೆದುಕೊಳ್ಳಲು ನಾವು ಬದ್ದರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ಪ್ರತಿಯೊಂದು ಬೇಡಿಕೆಗಳನ್ನು ನಮ್ಮ ಸರ್ಕಾರದ ಅವಧಿಯಲ್ಲೇ ಈಡೇರಿಸುತ್ತೇವೆ. ಕಾನೂನಿನ ಅಂಶಗಳು ಇದರಲ್ಲಿ ಅಡಕವಾಗಿರುವ ಕಾರಣ, ವಿಳಂಬವಾಗಿದೆ. ಆದರೂ ಪ್ರತಿಯೊಂದು ವರ್ಗಗಳ ಹಿತಾಸಕ್ತಿಗಳನ್ನು ಕಾಪಾಡಲು ನಮ್ಮ ಸರ್ಕಾರ ಶಕ್ತಿ ಮೀರಿ ಪ್ರಯತ್ನ ಮಾಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
Advertisement