ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ವಿಧಿಸುವವರ ವಿರುದ್ಧ ಕ್ರಮ: ಸಚಿವ ಮಾಧುಸ್ವಾಮಿ ಎಚ್ಚರಿಕೆ
ಮುಸ್ಲಿಂ ವರ್ತಕರು ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ವಿಧಿಸುವ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಎಚ್ಚರಿಸಿದ್ದಾರೆ.
Published: 11th April 2022 12:41 AM | Last Updated: 11th April 2022 12:41 AM | A+A A-

ಸಚಿವ ಮಾಧುಸ್ವಾಮಿ
ವಿಜಯನಗರ: ಮುಸ್ಲಿಂ ವರ್ತಕರು ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ವಿಧಿಸುವ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಎಚ್ಚರಿಸಿದ್ದಾರೆ.
ಧಾರವಾಡದಲ್ಲಿ ಮುಸ್ಲಿಮರ ಅಂಗಡಿ ಧ್ವಂಸಗೊಳಿಸಿದ ಘಟನೆ ಬಗ್ಗೆ ಪ್ರಕ್ರಿಯಿಸಿದ ಮಾಧುಸ್ವಾಮಿ ಅವರು, ‘ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸುವವರು ಅಥವಾ ಗಲಾಟೆ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸುತ್ತೇವೆ. ದೇಶದಲ್ಲಿ ವ್ಯಾಪಾರ ಮಾಡಲು ಸಂವಿಧಾನಾತ್ಮಕವಾಗಿ ಎಲ್ಲರಿಗೂ ಹಕ್ಕಿದೆ. ಕಾನೂನು ಉಲ್ಲಂಘಿಸುವವರನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸುವುದಿಲ್ಲ. ಮುಸ್ಲಿಂ ವರ್ತಕರಿಗೆ ನಿರ್ಬಂಧಿಸುವುದಕ್ಕೆ ಸರ್ಕಾರದ ಬೆಂಬಲವಿಲ್ಲ. ಹಿಂದೂಪರ ಸಂಘಟನೆಗಳವರು ಏಕೆ ಮಾಡುತ್ತಿದ್ದಾರೆ? ಮಿತಿ ಮೀರಿದರೆ, ಕಾನೂನು ಕೈಗೆತ್ತಿಕೊಂಡರೆ, ಸರ್ಕಾರ ಕ್ರಮ ವಹಿಸಿಯೇ ತೀರುತ್ತದೆ. ಇದರಲ್ಲಿ ಎರಡು ಮಾತಿಲ್ಲ’ ಎಂದು ಅವರು ಎಚ್ಚರಿಕೆ ನೀಡಿದರು.
‘ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದೆಲ್ಲ ಹೇಳಿರುವೆನೆಂದು ಖಾಸಗಿ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿದೆ ಎಂದು ಗೊತ್ತಾಗಿದೆ. ಸರ್ಕಾರದಲ್ಲಿದ್ದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಪರಿಸ್ಥಿತಿ ಯಾವತ್ತೂ ಉದ್ಭವವಾಗಿಲ್ಲ. ಆ ರೀತಿ ಮಾತಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.