ದೇವಸ್ಥಾನದ ಒಳಗೆ ನುಗ್ಗಿದ ನೀರು
ದೇವಸ್ಥಾನದ ಒಳಗೆ ನುಗ್ಗಿದ ನೀರು

ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಮನೆ ಕುಸಿದು ಇಬ್ಬರು ಮಕ್ಕಳು ಸಾವು, ದೇಗುಲ ಪ್ರವೇಶಕ್ಕೆ 2 ದಿನ ನಿರ್ಬಂಧ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಭೂಕುಸಿತದಿಂದ ಮನೆ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಭೂಕುಸಿತದಿಂದ ಮನೆ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಮೃತ ಮಕ್ಕಳನ್ನು11 ವರ್ಷದ ಶ್ರುತಿ ಮತ್ತು 6 ವರ್ಷದ ಜ್ಞಾನಶ್ರೀ ಎಂದು ಗುರುತಿಸಲಾಗಿದೆ. ಈ ಇಬ್ಬರು ಬಾಲಕಿಯರು ಕುಸುಮಾಧರ್ ಮತ್ತು ರೂಪಶ್ರೀ ದಂಪತಿಯ ಮಕ್ಕಳು.

ಏತನ್ಮಧ್ಯೆ, ಭಾರೀ ಮಳೆ ಮತ್ತು ವಿದ್ಯುತ್ ಕಡಿತದಿಂದ ಕತ್ತಲಾಗಿದ್ದರಿಂದ ಮಕ್ಕಳ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನೀರಿನ ಹರಿವು ಕಡಿಮೆಯಾದ ಬಳಿಕ ಜೆಸಿಬಿ ತರಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸಿ ಮಣ್ಣನ್ನು ಸರಿಸುವಷ್ಟರಲ್ಲಿ ಮಕ್ಕಳು ಮೃತಪಟ್ಟಿದ್ದರು.

ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ಮೇಲ್ವಿಚಾರಣಾ ಪಡೆ(ಎಸ್‌ಡಿಆರ್‌ಎಫ್) ಈಗಾಗಲೇ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ ಸುನೀಲ್ ಕುಮಾರ್ ಅವರು ಹೇಳಿದ್ದಾರೆ. 

ಸೋಮವಾರ ಸಂಜೆ ಸುಬ್ರಹ್ಮಣ್ಯ ಸಮೀಪದ ಹರಿಹರ ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ನಾಲ್ಕು ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಭಾರೀ ಮಳೆಯಿಂದಾಗಿ ದರ್ಪಣತೀರ್ಥ ನದಿಯು ತುಂಬಿ ಹರಿಯುತ್ತಿದ್ದು, ಆದಿಸುಬ್ರಹ್ಮಣ್ಯ ದೇವಸ್ಥಾನದ ಒಳಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪ್ರವೇಶಕ್ಕೆ ಎರಡು ದಿನ ನಿರ್ಬಂಧ ವಿಧಿಸಲಾಗಿದ್ದು, ಭಕ್ತರು ಸಹಕರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆವಿ ಅವರು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com