ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಮೂರು ಪ್ರಮುಖ ಆರೋಪಿಗಳ ಬಂಧನ: ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು  ಪ್ರಮುಖ  ಆರೋಪಿಗಳನ್ನು ಬಂಧಿಸಿದ್ದಾರೆ. 
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು  ಪ್ರಮುಖ  ಆರೋಪಿಗಳನ್ನು ಬಂಧಿಸಿದ್ದಾರೆ. 

ಪೊಲೀಸ್ ಮೂಲಗಳ ಪ್ರಕಾರ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದಿನ್ ಅಲಿ, ರಿಯಾಜ್ ಮತ್ತು ಬಶೀರ್ ಎಂಬುವವರನ್ನು ಪೊಲೀಸರು ಬಂದಿಸಿದ್ದು, ಹತ್ಯೆ ಬಳಿಕ ಈ ಮೂವರು ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿದೆ. ಕೇರಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ಪ್ರವೀಣ್ ನೆಟ್ಟಾರು ಹತ್ಯೆಗೈದಿದ್ದ ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿತ್ತು. ಈ ಕುರಿತು ಮಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಗೆ ಪೊಲೀಸರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಪ್ರವೀಣ್ ಹತ್ಯೆಗೈದಿದ್ದ ಪ್ರಮುಖ ಆರೋಪಿಗಳ ಬಂಧನ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಆಗಸ್ಟ 08ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದರು. ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್.ಸಿ.ಎ(33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಿಗೆ ನೆರವು ನೀಡಿದ ಹಿನ್ನೆಲೆ ಬಂಧಿಸಲಾಗಿದೆ. ಈವರೆಗೆ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಒಟ್ಟು ಏಳು ಜನರನ್ನು ಬಂಧಿಸಿದ್ದಾರೆ. ಜುಲೈ 28ರಂದು ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಜಾಕೀರ್​ನನ್ನು ಬಂಧಿಸಿಲಾಗಿತ್ತು. ಅಗಸ್ಟ್ 1ರಂದು ಪಲ್ಲಿ ಮಜಲು ನಿವಾಸಿಗಳಾದ ಸದ್ದಾಂ ಮತ್ತು ಹ್ಯಾರಿಸ್​ನನ್ನು ಬಂಧಿಸಲಾಗಿದೆ. 

ಅಗಸ್ಟ್ 07 ರಂದು ಸುಳ್ಯದ ನಾವೂರು ನಿವಾಸಿ ಅಬೀದ್(22) ಮತ್ತು ಬೆಳ್ಳಾರೆ ನಿವಾಸಿ ನೌಫಲ್(28) ನನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದೀಗ ಏಳನೇ ಆರೋಪಿಯಾಗಿ ಅಬ್ದುಲ್ ಕಬೀರ್ ಸಿ.ಎ(33) ನನ್ನು ಬಂಧಿಸಲಾಗಿದೆ.  ಅಬಿದ್​ ನಾವೂರು ನಿವಾಸಿ ಯಾಕೂಬ್ ಮಗ. ನೌಫಾಲ್ ಬೆಳ್ಳಾರೆಯ ಗೌರಿಹೊಳೆ ನಿವಾಸಿ ಮೊಹಮ್ಮದ್ ಮಗನಾಗಿದ್ದಾನೆ. ಹಂತಕರು ಕೊಲೆ ಮಾಡಲು ಅಬೀದ್ ಬಳಿ ಇದ್ದ ಕೇರಳ ರಿಜಿಸ್ಟ್ರೇಷನ್​ ಬೈಕ್​ನ್ನು ಬಳಸಿದ್ದಾರೆ ಎಂದು ಹೇಳಲಾಗುತ್ತಿದೆ.

ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ
ಇನ್ನು ಪ್ರಮುಖ ಆರೋಪಿಗಳ ಬಂಧನವನ್ನು ಎಡಿಜಿಪಿ ಅಲೋಕ್ ಕುಮಾರ್ ಅವರು ಖಚಿತ ಪಡಿಸಿದ್ದು, ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 'ಗುರುವಾರ ಬೆಳಗ್ಗೆ 8 ಗಂಟೆಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ಸುಳ್ಯದ ಶಿಯಾಬುದ್ದೀನ್ ಅಲಿ, ಸುಬ್ರಹ್ಮಣ್ಯದ ರಿಯಾಝ್ ಮತ್ತು ಸುಳ್ಯದ ಬಶೀರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ, 'ಹತ್ಯೆಯ ಹಿಂದಿನ ಉದ್ದೇಶ ಇನ್ನೂ ಪತ್ತೆಯಾಗಿಲ್ಲ ಮತ್ತು ಅವರು ಎಸ್‌ಡಿಪಿಐ ಮತ್ತು ಪಿಎಫ್‌ಐ ಜೊತೆ ಸಂಪರ್ಕ ಹೊಂದಿದ್ದಾರೆಂಬ ಶಂಕೆ ಇದೆ. ಆದಾಗ್ಯೂ ನಾವು ಪುರಾವೆಗಳನ್ನು ಸಂಗ್ರಹಿಸಿದ ನಂತರ ನಾವು ಈ ಲಿಂಕ್ ಕುರಿತು ಪರಿಶೀಲನೆ ನಡೆಸುತ್ತೇವೆ. ಅಪರಾಧದ ನಂತರ ಅವರು ತಕ್ಷಣವೇ ಕೇರಳಕ್ಕೆ ಪರಾರಿಯಾಗಿದ್ದಾರೆ ಮತ್ತು ಆಗಾಗ ಸ್ಥಳವನ್ನು ಬದಲಾಯಿಸುತ್ತಿದ್ದರು. ಈ ಪ್ರಕರಣದ ಸೂಕ್ತ ತನಿಖೆಯ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲಾಗುವುದು ಎಂದರು.

ಜುಲೈ 26 ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿರುವ ತನ್ನ ಕಚೇರಿ ಎದುರು ಪ್ರವೀಣ್ ನೆಟ್ಟಾರು ಎಂಬುವರನ್ನು ಕೊಲೆ ಮಾಡಲಾಗಿತ್ತು. ಹತ್ಯೆಗೆ ಸಂಚು ರೂಪಿಸಿದ್ದ ಏಳು ಮಂದಿಯನ್ನು ಈ ಹಿಂದೆ ಬಂಧಿಸಲಾಗಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com