ಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ; ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಸಿದ್ದಾರೆ.
ಶ್ರೀರಾಮುಲು
ಶ್ರೀರಾಮುಲು

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಹಬ್ಬದ ವೇಳೆ  ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುತ್ತಾರೆ. ಇದನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ಆಯಾ ಮಾರ್ಗಗಳಲ್ಲಿ ಸರ್ಕಾರ ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು ಎಂದು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ದುಪ್ಪಟ್ಟು ದರ ವಿಧಿಸುತ್ತಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ತಪಾಸಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಯಾಣಿಕರಿಗೆ ಕಿರಿಕಿರಿ ಉಂಟು  ಮಾಡುವುದು, ಇಲ್ಲವೇ ತೊಂದರೆ ಕೊಟ್ಟು ಹೆಚ್ಚಿನ ದರ ವಸೂಲಿ ಮಾಡಿದರೆ ಸಹಿಸುವುದಿಲ್ಲ. ಹಾಗೊಂದು ವೇಳೆ ನನ್ನ ಗಮನಕ್ಕೆ ಬಂದರೆ ಅಂತಹ ಬಸ್ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಲಾಭ-ನಷ್ಟದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸಿಕೊಡಿ. ಹಬ್ಬದ ಸಂದರ್ಭದಲ್ಲಿ ಕುಟುಂಬ ಸಮೇತ ತಮ್ಮ ಊರುಗಳಿಗೆ ಸಾರ್ವಜನಿಕರು ತೆರಳುತ್ತಾರೆ. ಅಕ್ರಮವಾಗಿ ಹಣ ಸಂಪಾದನೆ  ಮಾಡುವುದೇ ನಮ್ಮ ಗುರಿ ಎಂದಾದರೆ ಕಾನೂನು ಕ್ರಮ ಅನುಭವಿಸಲು ಸಿದ್ದವಾಗಿರಿ. ನಿಗದಿಗಿಂತ ಹೆಚ್ಚಿನ ದರ ವಿಧಿಸಿದರೆ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ತೆರಳಲು ಅನುಕೂಲವಾಗುವಂತೆ ಮುಂಗಡ ಆನ್‍ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಕಲ್ಲಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು. 5ಕ್ಕೂ  ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ ಶೇ 5 ರಷ್ಟು ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಆಗಸ್ಟ್ 30 ಹಾಗೂ 31ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾನು ಈಗಲೂ ಖಾಸಗಿ ಬಸ್ ಮಾಲೀಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಯಾಣಿಕರಿಗೆ ಹೊರೆಯಾಗದಂತೆ ನಿಗದಿಪಡಿಸಿದ ದರವನ್ನು ಮಾತ್ರ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ. ಅಕ್ರಮವಾಗಿ ಹಣ ಸಂಪಾದನೆಯೇ ನಮ್ಮ ಏಕೈಕ ಗುರಿ ಎಂದರೆ ಕ್ರಮಕ್ಕೆ ಸಿದ್ದರಾಗಿ. 3/3

— B Sriramulu (@sriramulubjp) August 28, 2022

ರಾಜ್ಯದ ವಿವಿಧ ಜಿಲ್ಲೆಗಳಿಗೆ 500 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಮೆಜೆಸ್ಟಿಕ್‌ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ತಿರುಪತಿ, ಹೈದರಾಬಾದ್ ಸೇರಿದಂತೆ ಹಲವೆಡೆಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ.

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರಕ್ಕೆ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಹಾಗೂ ಅಂತರಾಜ್ಯ ಪ್ರಯಾಣಿಕರಿಗೂ ವಿವಿಧ ಸ್ಥಳಗಳಿಂದ   ಆಗಸ್ಟ್ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com