ಬೆಂಗಳೂರು: ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 50 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿದೆ. ಅಲ್ಲದೆ, ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಮಳೆ ನೀರಿನ ಚರಂಡಿಗಳನ್ನು ತೆರವುಗೊಳಿಸಲು ಮತ್ತು ಪ್ರವಾಹವನ್ನು ಕಡಿಮೆ ಮಾಡಲು ಜೆಸಿಬಿ ವಾಹನಗಳನ್ನು ನಿಯೋಡಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬಿಬಿಎಂಪಿಯು ಪೈ ಲೇಔಟ್, ಸಾಯಿ ಲೇಔಟ್ ಮತ್ತು ಎಚ್ಎಸ್ಆರ್ ಲೇಔಟ್ನಲ್ಲಿ ನೀರಿನ ಪಂಪ್ಗಳನ್ನು ಹಾಕಿದ್ದು, ಬೀದಿಗಳು ಜಲಾವೃತವಾದಾಗ ಹತ್ತಿರದ ಚರಂಡಿಗಳಿಗೆ ನೀರನ್ನು ಪಂಪ್ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಗಿರಿನಾಥ್, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಬಿಬಿಎಂಪಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಮಸ್ಯೆಯನ್ನು ಬಗೆಹರಿಸಲು ಶಾಶ್ವತ ಕ್ರಮಗಳನ್ನು ಕೈಗೊಳ್ಳುವವರೆಗೆ ಮಳೆನೀರನ್ನು ಹೊರ ಹಾಕಲಾಗುವುದು ಎಂದರು.
ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ಗುಂಡಿಗಳು ಹೆಚ್ಚಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೋಲ್ಡ್ ಮಿಕ್ಸ್ ಬಳಸಿ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಮಳೆಗಾಲ ಮುಗಿದ ಬಳಿಕ ಹಾಟ್ ಮಿಕ್ಸ್ ಬಳಸಿ ಗುಂಡಿಯನ್ನು ಸರಿಪಡಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
Advertisement