ಗಡಿ ವಿವಾದ: ಮಹಾರಾಷ್ಟ್ರ ಸಚಿವರುಗಳ ಭೇಟಿ ವಿರೋಧಿಸಿ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನೆ
ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್ ದೇಸಾಯಿ ಹಾಗೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಅವರು ಡಿಸೆಂಬರ್ 6ರಂದು ಬೆಳಗಾವಿಗೆ ಆಗಮಿಸುವುದಾಗಿ ಹೇಳಿದ್ದು, ಮಹಾರಾಷ್ಟ್ರದ ಸಚಿವರ ಆಗಮನಕ್ಕೆ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.
Published: 05th December 2022 12:38 PM | Last Updated: 05th December 2022 03:06 PM | A+A A-

ಮಹಾರಾಷ್ಟ್ರದ ಸಚಿವರುಗಳ ಭೇಟಿ ವಿರೋಧಿಸಿ ಬೆಳಗಾವಿಯಲ್ಲಿ ಕನ್ನಡ ಕಾರ್ಯಕರ್ತರ ಪ್ರತಿಭಟನೆ
ಬೆಳಗಾವಿ: ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್ ದೇಸಾಯಿ ಹಾಗೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಅವರು ಡಿಸೆಂಬರ್ 6ರಂದು ಬೆಳಗಾವಿಗೆ ಆಗಮಿಸುವುದಾಗಿ ಹೇಳಿದ್ದು, ಮಹಾರಾಷ್ಟ್ರದ ಸಚಿವರ ಆಗಮನಕ್ಕೆ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.
ಇದನ್ನು ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಲು, ಬೆಂಗಳೂರಿನಿಂದ ವಿವಿಧ ಕನ್ನಡ ಸಂಘಟನೆಗಳು ಬೆಳಗಾವಿಯತ್ತ ಮುಖಮಾಡಿವೆ. ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಜಮಾಯಿಸುತ್ತಿರುವ ಕಾರ್ಯಕರ್ತರು, ಮಹಾರಾಷ್ಟ್ರದ ನಾಯಕರ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.
‘ಮಹಾರಾಷ್ಟ್ರ ರಾಜ್ಯದ ನಾಯಕರಿಗೆ ಬೆಳಗಾವಿ ಪ್ರವೇಶಿಸಲು ನಿರ್ಬಂಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದ ಅವರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಪ್ರಾಣ ಕೊಡುತ್ತೇವೆ. ಮಹಾರಾಷ್ಟ್ರಕ್ಕೆ ಬೆಳಗಾವಿ ಹೋಗಲು ಬಿಡುವುದಿಲ್ಲ’ ಎಂದು ಘೋಷಣೆ ಕೂಗಿದರು.
ಇದನ್ನೂ ಓದಿ: ಗಡಿ ವಿವಾದ ಬಿಸಿಯಾಗಿರುವ ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ರಾಜ್ಯಕ್ಕೆ ಬರುವುದು ಸೂಕ್ತವಲ್ಲ: ಸಿಎಂ ಬೊಮ್ಮಾಯಿ
ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಅವರ ಹೋರಾಟಕ್ಕೆ ಬೆಳಗಾವಿಯ ಕನ್ನಡ ಸಂಘಟನೆಗಳು ಕೂಡ ಬೆಂಬಲ ಸೂಚಿಸಿವೆ.
ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಪ್ರಮುಖ ಮಾರ್ಗಗಳಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕಾಗಿ ಬ್ಯಾರಿಕೇಡ್ ಅಳವಡಿಸಿದ್ದಾರೆ. ವಾಹನ ಸವಾರರ ತಪಾಸಣೆಯನ್ನೂ ನಡೆಸಿದ್ದಾರೆ.