ಬೆಂಗಳೂರು: ಬೆಳಗಾವಿ ಗಡಿ ವಿಚಾರವಾಗಿ ಕನ್ನಡಿಗರ ಆಕ್ರೋಶದ ಕಟ್ಟೆ ಹೊಡೆದಿದ್ದು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಸಿಎಂ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ.
ಗಡಿಯಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವವಸ್ಥೆ ಕಾಪಾಡಲು ಮನವಿ ಮಾಡಿದ್ದು ಇದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಬೊಮ್ಮಾಯಿ ತಮ್ಮ ಟ್ವೀಟ್ ನಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ದೂರವಾಣಿ ಮೂಲಕ ಮಾಡಿ ಮಾತನಾಡಿದ್ದಾರೆ. ಉಭಯ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದರು. ಎರಡೂ ರಾಜ್ಯಗಳ ಜನರ ನಡುವೆ ಸೌಹಾರ್ದಯುತ ಬಾಂಧವ್ಯ ಇರುವುದರಿಂದ ಕರ್ನಾಟಕದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಕಾನೂನು ಹೋರಾಟವನ್ನು ಸುಪ್ರೀಂ ಕೋರ್ಟ್ನಲ್ಲಿ ಗ್ರಹಿಸಲಾಗುವುದು ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ, ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುಣೆಯಿಂದ ಬೆಂಗಳೂರಿಗೆ ಹೊರಟಿದ್ದ ಮಹಾರಾಷ್ಟ್ರ ನೋಂದಣಿ ಹೊಂದಿದ್ದ ವಾಹನಗಳ ಮೇಲೆ ಕರವೇ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದು, ಲಾರಿಗಳ ಗಾಜು ಪುಡಿಪುಡಿಯಾಗಿದೆ. ಅಲ್ಲದೆ ಮಹಾರಾಷ್ಟ್ರ ನೋಂದಣಿಯ ಹಲವು ವಾಹನಗಳನ್ನು ತಡೆದು ನಂಬರ್ ಪ್ಲೇಟ್ ಮೇಲೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರದ ಗಡಿ ಕ್ಯಾತೆ ಈಗ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟು ಮಾಡಿದೆ. ಮಹಾರಾಷ್ಟ್ರ ನಾಯಕರು ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ಬೃಹತ್ ಬಹಿರಂಗ ಸಭೆಯನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಕರವೇ ನಾಯಕರ ಬೆಳಗಾವಿ ನಗರ ಪ್ರವೇಶಕ್ಕೂ ತಡೆಯೊಡ್ಡಲಾಗಿದೆ.
Advertisement