ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಬೆಳ್ತಂಗಡಿ ಮತ್ತು ಬಂಟ್ವಾಳದ ನೇತ್ರಾವತಿ ನದಿಯ ದಡದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾತ್ರಿ ದಾಳಿ ನಡೆಸಿ ಅಕ್ರಮ ಮರಳು ಸಾಗಣೆಗೆ ಬಳಸುತ್ತಿದ್ದ ದೋಣಿಗಳು ಮತ್ತು ಟ್ರಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮರಳು ದಂಧೆ ಕುರಿತುಲವು ದೂರುಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಕಲಾವತಿ, ಡಿವೈಎಸ್ಪಿ ಚೆಲುವರಾಜು ಬಿ, ಇನ್ಸ್ ಪೆಕ್ಟರ್ ಅಮಾನುಲ್ಲಾ ನೇತೃತ್ವದ ಮೂರು ತಂಡಗಳು ಮೂಲ್ಕಿ, ಬೆಳ್ತಂಗಡಿ, ಬಂಟ್ವಾಳದ ಹಲವೆಡೆ ದಾಳಿ ನಡೆಸಿ ವಶಪಡಿಸಿಕೊಂಡಿವೆ ಎಂದು ಮಂಗಳೂರು ವಿಭಾಗದ ಲೋಕಾಯುಕ್ತ, ಮಂಗಳೂರು ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಗಣೇಶ್ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ಎರಡು ಟ್ರಕ್ ಹಾಗೂ ಒಂದು ಬೋಟ್ ವಶಪಡಿಸಿಕೊಳ್ಳಲಾಗಿದೆ. ಆದರೆ ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದರು. 40 ಲಕ್ಷ ಮೌಲ್ಯದ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
''ಅಕ್ರಮ ಮರಳು ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟವಾಗುತ್ತಿದೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಹೇಳಿದರು.
ಲೋಕಾಯುಕ್ತ ಮಂಗಳೂರು ವಿಭಾಗದಲ್ಲಿದ.ಕ ಜಿಲ್ಲೆಗೆ ಸಂಬಂಧಿಸಿ ಶುಕ್ರವಾರ ನಡೆದ ನೇರ ಪೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 25 ದೂರು ಕರೆಗಳು ಬಂದಿವೆ. ಇವುಗಳಲ್ಲಿ ಕಂದಾಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಮುಡಾಗೆ ಸಂಬಂಧಿಸಿದ ದೂರುಗಳಿದ್ದು ಅವುಗಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಡಿ. 16ರಂದು ಈ ತಿಂಗಳಿನ ಇನ್ನೊಂದು ಸುತ್ತಿನ ಫೋನ್-ಇನ್ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ದೂರು ನೀಡಬಹುದಾಗಿದೆ. ಸಾರ್ವಜನಿಕರು ತಮ್ಮ ದೂರುಗಳನ್ನು ಸ್ಥಿರ ದೂರವಾಣಿ 0824-2950997/2427237 ಗೆ ಕಳುಹಿಸುವಂತೆ ತಿಳಿಸಿದ್ದಾರೆ.
Advertisement