ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯ ಮಹತ್ವ ತಿಳಿಸಲು 'ಮನೋಸ್ಥೈರ್ಯ' ಕಾರ್ಯಕ್ರಮ ಆರಂಭ!

ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ‘ಮನೋಸ್ತೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ‘ಮನೋಸ್ಥೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

ಮಂಗಳವಾರ ಮಂಗಳೂರಿನಲ್ಲಿ ಈ ಉಪಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಕಾರ್ಯಕ್ರಮದಡಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮತ್ತು ಸಮಾಲೋಚನೆ ನೀಡಲಾಗುತ್ತಿದೆ.

ಕಾರ್ಯಕ್ರಮದ ಮೂಲಕ ಶಾಲೆಯ ಶಿಕ್ಷಕರಿಗೆ ಮನಶ್ಶಾಸ್ತ್ರಜ್ಞರು ಮತ್ತು ಮನೋವೈದ್ಯರಿಂದ ತರಬೇತಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆ ಕಾರ್ಯಕ್ರಮಕ್ಕೆ ಇದು ಮೊದಲ ಉಪಕ್ರಮವಾಗಿದೆ.

ಈಗಾಗಲೇ 220 ಶಿಕ್ಷಕರನ್ನು ಗುರುತಿಸಲಾಗಿದ್ದು, 2023ರ ಜನವರಿಯಿಂದ ಕಾರ್ಯಕ್ರಮ ಆರಂಭವಾಗುವ ನಿರೀಕ್ಷೆಯಿದೆ.

ಮಕ್ಕಳಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಮತ್ತು ಖಿನ್ನತೆಯ ಸಂಖ್ಯೆಯು ಕಳವಳಕ್ಕೆ ಪ್ರಮುಖ ಕಾರಣವಾಗಿದೆ. ಈ ಸಮಸ್ಯೆಗೆ ಅಂತ್ಯ ಹಾಡಲು ನಾವು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ವಯಸ್ಸಿನಲ್ಲಿ ಮಧ್ಯಪ್ರವೇಶಿಸಬೇಕಾಗಿದೆ. ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಓದುತ್ತಿರುವವರು ಜೀವನದ ವಾಸ್ತವಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಕಷ್ಟಕರ ಸಂದರ್ಭಗಳನ್ನು ಎದುರಿಸಲು ಅಸಹಾಯಕರಾಗುತ್ತಾರೆ. ತಮ್ಮ ಸಮಸ್ಯೆಗಳಿಗೆ ಪರ್ಯಾಯ ಪರಿಹಾರಗಳನ್ನು ಕಂಡುಗೊಳ್ಳದೆ,ಖಿನ್ನತೆಯಲ್ಲಿ ಏಕಾಂಗಿಯಾಗಿ ಹೋರಾಡುತ್ತಾರೆ.

ಖಿನ್ನತೆ, ಹತಾಶೆ, ಆತಂಕ, ಅನಿಯಂತ್ರಿತ ಕೋಪ ಮತ್ತು ಇತರ ಮಾನಸಿಕ ಅಸ್ವಸ್ಥತೆಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ, ಕೆಲವು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಇದು ಸಮಯದ ಅಗತ್ಯವಾಗಿದೆ. ಕೌನ್ಸೆಲಿಂಗ್‌ನಿಂದ ವಿದ್ಯಾರ್ಥಿಗಳು ಇದರಿಂದ ಹೊರಬರಲು ಖಂಡಿತಾ ಸಹಕಾರಿಯಾಗುತ್ತದೆ ಎಂದು ಡಾ.ಕುಮಾರ ಹೇಳಿದ್ದಾರೆ.

‘ನೋ ಬ್ಯಾಗ್’ ದಿನದಂದು ಮಕ್ಕಳ ಮಾನಸಿಕ ಆರೋಗ್ಯಕ್ಕಾಗಿ ಒಂದು ಗಂಟೆ ಮೀಸಲಿಡಲಾಗುವುದು. ಪ್ರತಿ ಶಾಲೆಯ ಮುಖ್ಯೋಪಾಧ್ಯಾಯಿನಿ/ ಮುಖ್ಯೋಪಾಧ್ಯಾಯರು ಮಾನಸಿಕ ಆರೋಗ್ಯದ ಕುರಿತು ತರಗತಿಗಳನ್ನು ನಡೆಸಲು ಒಬ್ಬ ಶಿಕ್ಷಕರನ್ನು ನೋಡಲ್ ಅಧಿಕಾರಿ ಅಥವಾ ಮಾರ್ಗದರ್ಶಕರಾಗಿ ನೇಮಿಸುತ್ತಾರೆ. ಶಾಲೆಗಳಲ್ಲಿ ಮಾನಸಿಕ ಆರೋಗ್ಯ ಸಮಾಲೋಚನಾ ಕೇಂದ್ರವನ್ನು ಸಹ ತೆರೆಯಲಾಗುವುದು ಮತ್ತು ಒತ್ತಡದಲ್ಲಿರುವ ಮಕ್ಕಳಿಗೆ ವಿಶೇಷ ಸಮಾಲೋಚನೆಯನ್ನು ನೀಡುವ ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತದೆ. ಮಾನಸಿಕ ಆರೋಗ್ಯ ಮತ್ತು ಸ್ಥಿರತೆ ಕುರಿತು ತರಗತಿಗಳು ಪ್ರತಿ ವಾರ ನಡೆಯಲಿವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com