ಡಿ.28 ರವರೆಗೆ ಸ್ಟೋನ್ ಕ್ರಷರ್, ಕ್ವಾರಿ ಬಂದ್; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾಲೀಕರಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದು, ಡಿಸೆಂಬರ್ 28 ವರೆಗೆ ಸ್ಟೋನ್ ಕ್ರಷರ್ ಮತ್ತು ಕ್ವಾರಿಗಳನ್ನು ಬಂದ್ ಮಾಡುವುದಾಗಿ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದು, ಡಿಸೆಂಬರ್ 28 ವರೆಗೆ ಸ್ಟೋನ್ ಕ್ರಷರ್ ಮತ್ತು ಕ್ವಾರಿಗಳನ್ನು ಬಂದ್ ಮಾಡುವುದಾಗಿ ಹೇಳಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ ಸೆಂಟರ್ (ಕೆಎಸ್‌ಆರ್‌ಎಸ್‌ಎಸಿ) ಕಾಯ್ದೆ 1994ರ ಕರ್ನಾಟಕ ಮೈನರ್ ಮಿನರಲ್ಸ್ ರಿಯಾಯತಿ ನಿಯಮಗಳಿಗೆ ತಿದ್ದುಪಡಿ ತಂದು ಯಾವುದೇ ಅಡಚಣೆ ಇಲ್ಲದೆ ಕ್ರಷರ್‌ಗಳನ್ನು ನಡೆಸಲು ದಾರಿ ಮಾಡಿಕೊಡಬೇಕು ಎಂದು ಹಾಸನ ಜಿಲ್ಲಾ ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ಉಪಾಧ್ಯಕ್ಷ ಎನ್.ಆರ್.ಅನಂತಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನಂತಕುಮಾರ್ ಅವರು, ಈಗಿರುವ ಕಾಯ್ದೆಯಲ್ಲಿ ಕೆಲವು ತಾಂತ್ರಿಕ ಅಡಚಣೆಗಳಿರುವುದರಿಂದ ಕ್ರಷರ್ ಮಾಲೀಕರು ಕ್ರಷರ್ ನಡೆಸಲು ತೊಂದರೆಯಾಗುತ್ತಿದೆ. ನಿರ್ಮಾಣ ಕ್ಷೇತ್ರದ ಹಿತದೃಷ್ಟಿಯಿಂದ ಕಾಯ್ದೆಗೆ ತಿದ್ದುಪಡಿ ತರುವುದು ಇಂದಿನ ಅಗತ್ಯವಾಗಿದೆ. ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲೀಕರ ಹಿತದೃಷ್ಟಿಯಿಂದ ಸರ್ಕಾರ ಹೊಸ ಮಸೂದೆಯನ್ನು ತರಬೇಕು ಎಂದು ಆಗ್ರಹಿಸಿದರು.

ಗಣಿ ಮತ್ತು ಭೂವಿಜ್ಞಾನ ಸಚಿವರ ಮೂಲಕ ಹಲವು ಬಾರಿ ಮನವಿ ಪತ್ರಗಳನ್ನು ಸಲ್ಲಿಸಿದ್ದರೂ ಕ್ವಾರಿ ಮಾಲೀಕರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಡಿ.28ರವರೆಗೆ ಕಲ್ಲು ಕ್ವಾರಿ ಮತ್ತು ಕ್ರಷರ್ ಮಾಲೀಕರು ತಮ್ಮ ಕ್ರಷರ್‌ಗಳನ್ನು ಬಂದ್ ಮಾಡಿ ಬೆಳಗಾವಿಯಲ್ಲಿ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಸಂಘದ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ ಎಂದರು.

ಈ ವೇಳೆ ಕ್ವಾರಿ ಮಾಲೀಕರಾದ ಚಂದ್ರಶೇಖರ್, ಮಹೇಶ್, ಪುರುಷೋತ್ತಮ್, ಜಗದೀಶ್ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com