ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಈ ಬೆಳವಣಿಗೆ ಕುರಿತು ಇದೀಗ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಕ್ರಿಸ್'ಮಸ್ ರಜೆ ಬಳಿಕ ರಾಜ್ಯದಲ್ಲಿ ಬಹುತೇಕ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ಸೋಂಕು ಹೆಚ್ಚಾಗುವ ಭೀತಿ ಹಿನ್ನೆಲೆಯಲ್ಲಿ ಈ ಹಿಂದಿನ ಮಾರ್ಗಸೂಚಿಯನ್ನೇ ಅನುಸರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ನಿರ್ದಿಷ್ಟ ಮಾರ್ಗಸೂಚಿಗಳನ್ನು ನಿಗದಿಪಡಿಸದ ಕಾರಣ, ನೈರ್ಮಲ್ಯೀಕರಣ, ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದು ಮುಂತಾದ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತ ಆರ್ ವಿಶಾಲ್ ಹೇಳಿದ್ದಾರೆ.
ಹೊಸ ಮಾರ್ಗಸೂಚಿಗಳ ಹೊರಡಿಸಿದ ಬಳಿಕ ಆ ಮಾರ್ಗಸೂಚಿಗಳನ್ನು ಶಾಲೆಗಳಲ್ಲಿ ಅಳವಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಖಾಸಗಿ ಶಾಲೆಗಳು ಈಗಾಗಲೇ ತಮ್ಮ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಪೋಷಕರಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿದುಬಂದಿದೆ.
ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ ಆಫ್ ಪ್ರೈಮರಿ ಮತ್ತು ಸೆಕೆಂಡರಿ ಶಾಲೆಗಳು (KAMS), ಶಾಲೆಗಳು ಪುನರಾರಂಭಗೊಂಡಾಗ ಸರಿಯಾದ ಕೋವಿಡ್ ನಿಯಮಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ತನ್ನ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ.
"ಶಾಲೆಗಳಲ್ಲಿ ಸಿಬ್ಬಂದಿ ಅಥವಾ ಮಕ್ಕಳಗಲ್ಲಿ ರೋಗಲಕ್ಷಣಗಳು ಕಂಡುಬಂದ ಸಂದರ್ಭದಲ್ಲಿ ಕೂಡಲೇ ಪರೀಕ್ಷೆ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳ ಕೈಗೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಮಾಸ್ಕ್ ಕಡ್ಡಾಯಗೊಳಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಕೆಎಎಂಎಸ್ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾನಿಲಯ ಕೂಡೇ ಇದೇ ರೀತಿಯ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
Advertisement