ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ರನ್ನು ಮತ್ತೆ 3 ದಿನ ಸಿಐಡಿ ವಶಕ್ಕೆ ನೀಡಿದ ಕೋರ್ಟ್!
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮಾಜಿ ಎಡಿಜಿಪಿ ಅಮೃತ್ ಪೌಲ್ ರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.
ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಅಮೃತ್ ಪೌಲ್ ರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೌಲ್ ರನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿ ದ್ದು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ಎಡಿಜಿಪಿ ಅಮೃತ್ ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ 1.36 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿದೆ. ಇನ್ನು ಮೊಬೈಲ್ ದತ್ತಾಂಶವನ್ನು ಅಳಿಸಿ ಹಾಕಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಇನ್ನು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಕೋರಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಕಳೆದ ಜುಲೈ 4ರಂದು ಸಿಐಡಿ ಅಧಿಕೃತವಾಗಿ ಬಂಧಿಸಿತ್ತು. ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಸಿಐಡಿ ಅವರನ್ನು ಬಂಧಿಸಿತ್ತು.
ಪಿಎಸ್ಐ ನೇಮಕಾತಿ ಹಗರಣದಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಇಂದು ಕಾರ್ಲ್ಟನ್ ಹೌಸ್ನಲ್ಲಿರುವ ಸಿಐಡಿ ಕಚೇರಿಗೆ 1995 ರ ಬ್ಯಾಚ್ನ ಐಪಿಎಸ್ ಅಧಿಕಾರಿ ಪೌಲ್ ಅವರನ್ನು ಮೂರನೇ ಬಾರಿ ವಿಚಾರಣೆಗೆ ಕರೆಯಲಾಗಿತ್ತು. ಹಗರಣದಲ್ಲಿ ಪೌಲ್ ಸೇರಿದಂತೆ 79 ಜನರನ್ನು ಬಂಧಿಸಿರುವ ಸಿಐಡಿ ಇದುವರೆಗೆ ಎಂಟು ಎಫ್ಐಆರ್ಗಳನ್ನು ದಾಖಲಿಸಿದೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಅವರು ನೇಮಕಾತಿ ಎಡಿಜಿಪಿ ಆಗಿದ್ದ ಸಂದರ್ಭದಲ್ಲಿ ಪರೀಕ್ಷೆಗಳು ನಡೆದಿದ್ದವು. ಹಗರಣ ಹೊರಬಿದ್ದ ಕೂಡಲೇ ಸರ್ಕಾರವು ಪೌಲ್ನನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾಯಿಸಿತ್ತು.
545 ಪಿಎಸ್ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್ಪಿ ಹಾಗೂ ಎಫ್ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ