ಬೆಂಗಳೂರು: ಇದೇ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ (Presidential election) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದ ಅವಶ್ಯಕ ಸಾಮಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಿಂದ ಬೆಂಗಳೂರಿನ ವಿಧಾನಸೌಧಕ್ಕೆ ತಲುಪಿದ್ದು, ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ.
ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ದೆಹಲಿಯಿಂದ ರಾಜ್ಯಕ್ಕೆ ಈ ಸಾಮಾಗ್ರಿಗಳನ್ನು ತರುವ ನೇತೃತ್ವ ವಹಿಸಿದ್ದರು. ನಿನ್ನೆ ಸಂಜೆ ದೆಹಲಿಯಿಂದ ರಾತ್ರಿ 8.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿ ಮತದಾನ ಸಾಮಗ್ರಿಗಳು ರಾತ್ರಿ 9 ಗಂಟೆಗೆ ವಿಧಾನಸೌಧ ತಲುಪಿವೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಸಹಾಯಕ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರ ಸಮ್ಮುಖದಲ್ಲಿ ಇದಕ್ಕಾಗಿ ಮೀಸಲಿಟ್ಟಿರುವ ಕೊಠಡಿ ಸಂಖ್ಯೆ 108ರಲ್ಲಿ ಇಡಲಾಯಿತು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಹಾಯಕ ಚುನಾವಣಾಧಿಕಾರಿ, ರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯದ ಒಟ್ಟು 224 ಶಾಸಕರು ಹಾಗೂ ಸಂಸತ್ ಸದಸ್ಯರು ಮತ ಚಲಾಯಿಸಲಿದ್ದಾರೆ. ಉಳಿದ ರಾಜ್ಯದ ಸಂಸದರು ಸಂಸತ್ನಲ್ಲಿ ಮತ ಚಲಾಯಿಸಲಿದ್ದಾರೆ. ಒಬ್ಬರು ಅನಾರೋಗ್ಯದ ಕಾರಣಕ್ಕಾಗಿ ಇಲ್ಲಿಯೇ ಮತ ಚಲಾಯಿಸಲು ಮನವಿ ಮಾಡಿಕೊಂಡಿರುವ ಕಾರಣಕ್ಕಾಗಿ ಚುನಾವಣಾ ಆಯೋಗ ಅನುಮತಿ ನೀಡಿದೆ ಎಂದು ಹೇಳಿದರು.
Advertisement