ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನೀವು ಅಧಿಕಾರದಲ್ಲಿರೋಕೆ ನಾಲಾಯಕ್; ಪ್ರಮೋದ್ ಮುತಾಲಿಕ್ ಆಕ್ರೋಶ

ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿಯ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಇದೀಗ ರಾಜ್ಯದಲ್ಲಿ ಕಿಚ್ಚಿಗೆ ಕಾರಣವಾಗಿದೆ. ಹಿಂದೂ ಕಾರ್ಯಕರ್ತನ ಹತ್ಯೆಯಾಗಿರುವುದಕ್ಕೆ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನೀವು ಅಧಿಕಾರದಲ್ಲಿ ಇರೋಕೆ ನಾಲಾಯಕ್. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಲಿ. ಪ್ರತಿಭಟನೆ ಮಾಡುವವರ ಮೇಲೆ ಯಾಕೆ ಲಾಠಿ ಬೀಸಿದ್ರು ಎಂದು ಬಿಜೆಪಿ ನಾಯಕರ ಮೇಲೆ ಮುತಾಲಿಕ್ ಕೆಂಡಾಮಂಡಲವಾಗಿದ್ದಾರೆ.

ಪ್ರವೀಣ್ ಹಂತಕರನ್ನು ಎನ್‌ಕೌಂಟರ್ ಮಾಡಿ. ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ಬ್ಯಾನ್ ಮಾಡಿ. ಆಗಸ್ಟ್ 5 ರಂದು ರಾಜ್ಯಮಟ್ಟದಲ್ಲಿ ಎಲ್ಲಾ ಹಿಂದೂ ಸಂಘಟನೆಗಳು ಸೇರಿ ಹೋರಾಟ ಮಾಡುತ್ತೇವೆ. ಸರಿಯಾದ ಕ್ರಮ ಕೈಗೊಳ್ಳಿ ಅಥವಾ ರಾಜೀನಾಮೆ ಕೊಟ್ಟು ನಡೆಯಿರಿ ಎಂದು ಒತ್ತಾಯಿಸಿದ್ದಾರೆ.

ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಖಂಡಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಗುರುವಾರ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ 'ಜನೋತ್ಸವ' ಕಾರ್ಯಕ್ರಮವನ್ನು ಕೂಡ ರದ್ದುಪಡಿಸಿದೆ.

ತಮ್ಮದೇ ಪಕ್ಷ ಆಡಳಿತದಲ್ಲಿದ್ದರೂ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಸಾಲು ಸಾಲು ಹತ್ಯೆಗಳಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಹಲವು ಜಿಲ್ಲೆಗಳ ಜಿಲ್ಲಾ ಮಟ್ಟದ ಹಲವು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವತ್ತ ಮುಖ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com