ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎ ತನಿಖೆಗೆ ಒತ್ತಾಯಿಸಿ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವರಿಗೆ ಪತ್ರ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು ಈಗಾಗಲೇ 15 ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. 
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು ಈಗಾಗಲೇ 15 ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. 

ಸುಳ್ಯ ತಾಲೂಕಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್, ಘಟನೆ ನಡೆದ ತಾಲೂಕಿನ ಬೆಳ್ಳಾರೆ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದ್ದು, ಎಲ್ಲಾ ಕೋನಗಳಿಂದಲೂ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಬಂಧನಕ್ಕೊಳಗಾದವರು ಕೊಲೆಯಲ್ಲಿ ಭಾಗಿಯಾಗಿದ್ದಾರೆಯೇ ಅಥವಾ ಈ ಕೊಲೆಗೆ ಸಹಾಯ ಮಾಡಿದ್ದಾರೆ ಎಂದು ಖಚಿತವಾಗಿ ತನಿಖೆಯ ನಂತರವಷ್ಟೇ ತಿಳಿದುಬರಲಿದೆ ಎಂದಿದ್ದಾರೆ. 

ಘಟನೆಯ ತನಿಖೆ ನಡೆಸಲು ಮಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ಉಡುಪಿ ಪೊಲೀಸರ ನೆರವಿನೊಂದಿಗೆ ಆರು ತಂಡಗಳನ್ನು ರಚಿಸಲಾಗಿದೆ ಎಂದರು. 

ಘಟನೆ ಬಗ್ಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಒಪ್ಪಿಸುವಂತೆ ಮನವಿ ಮಾಡಿದ್ದಾರೆ.

ಲೋಕಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೀಯ ಸ್ಥಾನವನ್ನು ಪ್ರತಿನಿಧಿಸುವ ಕರಂದ್ಲಾಜೆ, ಮುಸ್ಲಿಂ ಮೂಲಭೂತವಾದಿಗಳು, ಪಿಎಫ್‌ಐ, ಎಸ್‌ಡಿಪಿಐ ಮತ್ತು ಅಂತಹುದೇ ಗುಂಪುಗಳು ಹತ್ಯೆಗೆ ಕಾರಣವೆಂದು ಆರೋಪಿಸಿದರು. ಜಿಲ್ಲೆಯಲ್ಲಿ ಸೌಹಾರ್ದತೆಗೆ ಭಂಗ ತರಲು ಯತ್ನಿಸುತ್ತಿರುವ ಮೂಲಭೂತವಾದಿ ಸಂಘಟನೆಗಳು ಕೊಲೆಯ ಹಿಂದೆ ಇದೆ ಎಂದು ಆರೋಪಿಸಿದ್ದಾರೆ. 

ನೆಟ್ಟಾರ್ ಮೇಲೆ ದಾಳಿ ನಡೆಸಲು ಕೇರಳ ನೋಂದಣಿ ಸಂಖ್ಯೆಯನ್ನು ಹೊಂದಿರುವ ಬೈಕ್ ನಲ್ಲಿ ಆರೋಪಿಗಳು ಬಂದಿದ್ದಾರೆ ಎಂದು ಪತ್ರದಲ್ಲಿ ಹೇಳಿರುವ ಸಚಿವೆ ಕರಂದ್ಲಾಜೆ, ದಾಳಿಕೋರರು ಕೇರಳದ ಮೂಲಭೂತವಾದಿಗಳ ಗುಂಪುಗಳಿಗೆ ಸೇರಿದವರೇ ಎಂದು ಪತ್ತೆಹಚ್ಚಲು ಸಮಗ್ರ ತನಿಖೆ ಅಗತ್ಯ ಎಂದು ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com