ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಸಂಸ್ಥೆಗೆ ರಾಹುಲ್ ಭೇಟಿ ಸಾಧ್ಯತೆ!

ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆಗಸ್ಟ್ 2 ಅಥವಾ 3 ರಂದು ಹುಬ್ಬಳ್ಳಿಗೆ ಭೇಟಿ ನೀಡುವ ಸಾಧ್ಯತೆಯಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ಹುಬ್ಬಳ್ಳಿ: ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆಗಸ್ಟ್ 2 ಅಥವಾ 3 ರಂದು ಹುಬ್ಬಳ್ಳಿಗೆ ಭೇಟಿ ನೀಡುವ ಸಾಧ್ಯತೆಯಿದೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವು ತಿದ್ದುಪಡಿ ತಂದು ಯಂತ್ರದಿಂದ ತಯಾರಿಸಿದ ಪಾಲಿಯೆಸ್ಟರ್ ತ್ರಿವರ್ಣ ಧ್ವಜಗಳ ತಯಾರಿಕೆಗೆ ಅನುಮತಿ ನೀಡಿದೆ. ಈ ನಿರ್ಧಾರವನ್ನು ವಿರೋಧಿಸಿ ಖಾದಿ ಗ್ರಾಮೋದ್ಯೋಗ ಸಂಘಗಳು ಮತ್ತು ಇತರ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆಯಿಂದ (ಬಿಐಎಸ್‌) ಮಾನ್ಯತೆ  ಪಡೆದಿರುವ ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಏಕೈಕ ಖಾದಿ ಗ್ರಾಮೋದ್ಯೋಗ ಕೇಂದ್ರ ಇದಾಗಿದೆ. ಆಗಸ್ಟ್ 3 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳಲು ರಾಹುಲ್  ಗಾಂಧಿ ದಾವಣಗೆರೆಗೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಕಾರ್ಯಕ್ರಮದ ನಂತರ ಅವರು ಧ್ವಜ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಬುಧವಾರ ಕಾಂಗ್ರೆಸ್ ಮುಖಂಡರಾದ ಸತೀಶ ಜಾರಕಿಹೊಳಿ, ವೀರಣ್ಣ ಮಟ್ಟಿಕಟ್ಟಿ, ಉಮಾಶ್ರೀ, ಸ್ವಾತಂತ್ರ್ಯ ಹೋರಾಟಗಾರ ಗುಂಡೂರಾವ್ ದೇಸಾಯಿ ಇತರರು ಧ್ವಜ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವೆ ಉಮಾಶ್ರೀ, 'ಬಿಜೆಪಿಯ ಧ್ವಜ ವಿಭಿನ್ನವಾಗಿದೆ ಮತ್ತು ಅವರ ಭಾರತದ ಕಲ್ಪನೆಯೂ ವಿಭಿನ್ನವಾಗಿದೆ. ಅದಕ್ಕಾಗಿಯೇ ಅವರು ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಪಾಲಿಯೆಸ್ಟರ್ ಧ್ವಜಗಳಿಗೆ ಅನುಮತಿ ನೀಡಿದರು. ಖಾದಿ ಧ್ವಜದಲ್ಲಿ ಭಾವನೆ, ಪಾವಿತ್ರ್ಯತೆ, ಗೌರವವಿದ್ದು ಅದು ನಮ್ಮ ಹೆಮ್ಮೆ. ಮಹಾತ್ಮಾ ಗಾಂಧಿಯವರು ಖಾದಿಯನ್ನು ಧರಿಸಿದ್ದರು ಮತ್ತು ಈ ದೇಶವನ್ನು ರಾಮರಾಜ್ಯವನ್ನಾಗಿ ಮಾಡಲು ಗುಡಿ ಕೈಗಾರಿಕೆಗಳನ್ನು ಬೆಂಬಲಿಸಿದರು. ಆದರೆ ಈ ದೇಶದ ಬಗ್ಗೆ ಗೌರವ ಇಲ್ಲದವರು ಧ್ವಜ ಸಂಹಿತೆಗೆ ತಿದ್ದುಪಡಿ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಪಾಲಿಯೆಸ್ಟರ್ ಧ್ವಜಗಳನ್ನು ತಯಾರಿಸಲು ನಿಯೋಜಿಸಲಾದ ಸೂರತ್ ಕಾರ್ಖಾನೆಯಲ್ಲಿ ಕೇಂದ್ರ ಸಚಿವರ ಪುತ್ರ ಪಾಲುದಾರರಾಗಿದ್ದಾರೆ ಎಂದು ಮಾಧ್ಯಮಗಳಲ್ಲು ವರದಿಯಾಗಿದೆ ಎಂದು ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.  ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ಧ್ವಜ ಸಂಹಿತೆಯನ್ನು ತಿದ್ದುಪಡಿ ಮಾಡಿದೆ. ನೇಕಾರರು ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ಅವರನ್ನು ಬೆಂಬಲಿಸಬೇಕೇ ಹೊರತು ನಿರುತ್ಸಾಹಗೊಳಿಸಬಾರದು. ಶ್ರೀಮಂತರು ಮತ್ತು ಬಡವರ ನಡುವಿನ ಅಂತರವು ಹೆಚ್ಚುತ್ತಿದೆ ಮತ್ತು ನಾವು ಸ್ವಾತಂತ್ರ್ಯ ಪೂರ್ವದ ದಿನಗಳಿಗೆ ಹಿಂತಿರುಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಧ್ವಜ ಸಂಹಿತೆಗೆ ತಿದ್ದುಪಡಿ ತರುವುದು ಅಪರಾಧ ಮತ್ತು ದೇಶದಲ್ಲಿ ಪಾಲಿಯೆಸ್ಟರ್ ಧ್ವಜಗಳಿಗೆ ಅನುಮತಿ ನೀಡಿರುವುದು ನೋವಿನ ಸಂಗತಿ ಎಂದು ಹಂಪಿ ಬಳಿಯ ಕಮಲಾಪುರದ 95 ವರ್ಷದ ದೇಸಾಯಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com