ಪೀಣ್ಯ ಮೇಲ್ಸೇತುವೆ ಬಳಿ ಭೀಕರ ಅಪಘಾತ: ದಂಪತಿ ಸಾವು

ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಚಲಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಪೀಣ್ಯ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಚಲಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಪೀಣ್ಯ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುರ್ಘ‌ಟನೆ ನಡೆದಿದ್ದು, ಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಚಲಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರಿನ ದಾಸನಪುರದ ಸಿದ್ದನಹೊಸಹಳ್ಳಿ ನಿವಾಸಿ ರುದ್ರೇಶ್‌ (36 ವರ್ಷ) ಮತ್ತು ಅವರ ಪತ್ನಿ ಸುನೀತಾ (30 ವರ್ಷ) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ರುದ್ರೇಶ್‌ ಗಾರೆ ಕಾರ್ಮಿಕರಾಗಿದ್ದು, ಸುನೀತಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಪೀಣ್ಯದಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಹೋಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್‌ ಹೋಗುವಾಗ ದಾಸರಹಳ್ಳಿ ಮೇಲು ಸೇತುವೆ ಮೇಲೆ ಅತೀ ವೇಗವಾಗಿ ಬಂದ ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಈ ವೇಳೆ ಕೆಳಗೆ ಬಿದ್ದ ದಂಪತಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಇಬ್ಬರು ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಆರೋಪಿ ವಾಹನ ಸಮೇತ ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com