ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಡೀಸೆಲ್ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಸಂಸ್ಥೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ನಿಗಮದ ಆದಾಯದ ಶೇ.60ರಷ್ಟು ಹಣವನ್ನು ಇಂಧನ ಖರೀದಿಗೆ ವಿನಿಯೋಗಿಸಲಾಗುತ್ತಿದ್ದು, ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ನೀಡಲು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಎಸ್ಆರ್ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಎಚ್ವಿ ಅನಂತ ಸುಬ್ಬಾ ರಾವ್ ಮಾತನಾಡಿ, ಶೇ.25ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಕೆಎಸ್ಆರ್ಟಿಸಿ ಒಂದು ವಾರದ ಹಿಂದೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದಾರೆ.
ಕೆಎಸ್ಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ವಿ ಅನ್ಬು ಕುಮಾರ್ ಮಾತನಾಡಿ, ಮೂರು ವರ್ಷಗಳ ಹಿಂದೆ ಪ್ರಯಾಣ ದರವನ್ನು ಹೆಚ್ಚಿಸಿದಾಗ ನಿಗಮದ ಶೇ.32 ಆದಾಯವನ್ನು ಇಂಧನ ಖರೀದಿಸಲು ಬಳಸಲಾಗುತ್ತಿತ್ತು. ಇದೀಗ ಶೇ.60ರಷ್ಟು ಆದಾಯವನ್ನು ಬಳಕೆ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವುದರಿಂದ ನಿಗಮದ ಈ ಮನವಿಯನ್ನು ಸರ್ಕಾರ ತಿರಸ್ಕರಿಸುವ ಸಾಧ್ಯತೆಗಳಿವೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.
ಈ ನಡುವೆ ಈ ಸಂಬಂಧ ಸಾರಿಗೆ ಸಚಿವ ಶ್ರೀ ರಾಮುಲು ಅವರನ್ನು ಸಂಪರ್ಕಿಸಿ ಪ್ರತಿಕ್ರಿಯೆ ಪಡೆಯಲು ಯತ್ನ ನಡೆಸಲಾಗಿದ್ದು, ಸಚಿವರು ಸಂಪರ್ಕಕ್ಕೆ ಸಿಕ್ಕಿಲ್ಲ.
ಈತನ್ಮಧ್ಯೆ ಮುಂದಿನ ಮೂರು ತಿಂಗಳುಗಳಲ್ಲಿ ಕೆಎಸ್'ಆರ್'ಟಿಸಿಗೆ 50 ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆಯಾಗಲಿದ್ದು, ಈ ಪೈಕಿ ಒಂದು ಬಸ್ ನ್ನು ಮುಂದಿನ ತಿಂಗಳು ಕೆಲವು ವಾರಗಳ ಕಾಲ ಪ್ರಯೋಗಿಕವಾಗಿ ಓಡಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
Advertisement