ಮೇಕೆದಾಟು ಯೋಜನೆಗೆ ಡಿಪಿಆರ್ ಅನುಮೋದನೆ ಪಡೆಯುವ ವಿಶ್ವಾಸ ಇದೆ: ಸಿಎಂ ಬೊಮ್ಮಾಯಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದವನ್ನು ಮಂಡಿಸಿದ್ದು, ಡಿಪಿಆರ್ ಅನುಮೋದನೆಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ದಾವಣಗೆರೆ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದವನ್ನು ಮಂಡಿಸಿದ್ದು, ಡಿಪಿಆರ್ ಅನುಮೋದನೆಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಇಂದು ದಾವಣೆಗೆರೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, “ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಬಗ್ಗೆ ಯಾವುದೇ ತಡೆಯಾಜ್ಞೆ ಇಲ್ಲ. ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಿಷಯ ಈಗಾಗಲೇ ಶಿಫಾರಸ್ಸು ಆಗಿ, 15 ಸಭೆಗಳಾಗಿವೆ. ಪ್ರಾಧಿಕಾರಕ್ಕಿರುವ ಅಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ವಾರ ಸಭೆ ಕರೆಯುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸುವುದು ಕಾನೂನು ಬಾಹಿರ ಮತ್ತು ಅದಕ್ಕೆ ಯಾವುದೇ ಅರ್ಥವೂ ಇಲ್ಲ ಎಂದಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದೆ. ಮೊದಲನೇ ಹಂತದಲ್ಲಿ ಭಕ್ತವತ್ಸಲಂ ಸಮಿತಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೀಸಲಾತಿ ಪ್ರಕ್ರಿಯೆ ನಡೆಸಿದ್ದು, ಇದಾದ ಕೂಡಲೇ ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ವರದಿಯ ಆಧಾರದ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.

ಪಠ್ಯಪರಿಷ್ಕರಣೆ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತೇವೆ:
ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com