ಬೆಂಗಳೂರಿನಲ್ಲಿ ಮಳೆ ಅನಾಹುತ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ 24 ವರ್ಷದ ಯುವಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ. ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ. ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ.

ಸಂತ್ರಸ್ತ ಯುವಕನನ್ನು ಶಿವಮೊಗ್ಗ ಮೂಲದ ಸಿವಿಲ್ ಇಂಜಿನಿಯರ್ ಎಂದು ಹೇಳಲಾಗುತ್ತಿದ್ದು, ಈತ ಕೆಆರ್ ಪುರಂ ವ್ಯಾಪ್ತಿಯ ಗಾಯತ್ರಿ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ವರದಿಗಳು ತಿಳಿಸಿವೆ.

ಕಳೆದ ರಾತ್ರಿ 11ರಿಂದ 12ರ ನಡುವೆ ಸುರಿದ ಮಳೆಗೆ ಚರಂಡಿಗೆ ಹೊಂದಿಕೊಂಡಿರುವ ಕಾಂಪೌಂಡ್ ಗೋಡೆ ಕುಸಿದು ಮನೆ ಬಳಿ ನಿಲ್ಲಿಸಿದ್ದ ಬೈಕ್‌ಗಳ ಮೇಲೆ ಬಿದ್ದಿದೆ. ಈ ವೇಳೆ ಚರಂಡಿ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಬೈಕ್ ನ್ನು ಮೂವರು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದುರಾದೃಷ್ಟವಶಾತ್ ಮಿಥುನಾ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ. ಮಿಥುನಾ ಕೊಚ್ಚಿ ಹೋಗುತ್ತಿರುವುದನ್ನು ನೋಡಿದ ಇಬ್ಬರು ಕೂಗಾಡಿದ್ದಾರೆ. ಬಳಿಕ ಸ್ಥಳೀಯ ನಿವಾಸಿಗಳು ಬಿಬಿಎಂಪಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಮತ್ತು ತುರ್ತು ಸೇವೆಯ ಅಧಿಕಾರಿಗಳು ಮತ್ತು ಎನ್‌ಡಿಆರ್‌ಎಫ್ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಯುವಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಸೀಗೇಹಳ್ಳಿ ಕೆರೆಗೆ ಚರಂಡಿ ಅಂಟಿಕೊಂಡಿದ್ದು, ಮಳೆಯಿಂದಾಗಿ ಕೆರೆ ತುಂಬಿ ಕೋಡಿ ಹರಿದಿದ್ದು, ನೀರಿನ ರಭಸಕ್ಕೆ ಚರಂಡಿ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ.

ಮತ್ತೊಂದು ಘಟನೆಯಲ್ಲಿ ತಡರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಮುನಿಯಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com