ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ನಗರಕ್ಕೆ ಆಗಮಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಶನಿವಾರ ಈ ಬಗ್ಗೆ ಸರಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಒಟ್ಟು 22 ಸರಕಾರಿ/ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ.20ರಂದು ರಜೆ ಘೋಷಿಸಿ ಬೆಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶಿಸಿದ್ದಾರೆ. ರಜಾ ದಿನವನ್ನು ಮುಂದಿನ ಯಾವುದಾದರೂ ಒಂದು ರಜಾ ದಿನದಂದು ಸರಿದೂಗಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಆದೇಶ ಹಿನ್ನೆಲೆಯಲ್ಲಿ ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
Advertisement