ರಾಜ್ಯದ ಉರ್ದು ಶಾಲೆಗಳಿಗೆ ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತ

ರಾಜ್ಯದ ಹಲವು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಹಲವು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕಡಿಮೆ ಸಂಖ್ಯೆಯ ಶಿಕ್ಷಕರು ಇರುವುದರಿಂದ ಅವರು ಗುಣಮಟ್ಟದ ಬೋಧನೆಯ ಮೇಲೆ ಕೇಂದ್ರೀಕರಿಸುವ ಬದಲು ವಿವಿಧ ಕಾರ್ಯಗಳಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ನೇಮಕಾತಿ ಪರೀಕ್ಷೆಗಳಲ್ಲಿ ಅರ್ಹತೆ ಪಡೆಯುವ ಶಿಕ್ಷಕರ ಸಂಖ್ಯೆ ಕಡಿಮೆಯಾಗಿದೆ, ಇದು ರಾಜ್ಯದ ಉರ್ದು ಶಾಲೆಗಳಲ್ಲಿ ಬೋಧಕ ಸಿಬ್ಬಂದಿ ಕೊರತೆಯ ಪ್ರಮುಖ ಸಮಸ್ಯೆಯಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ (ಡಿಪಿಐ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನ ಅಂಕಿ ಅಂಶಗಳ ಪ್ರಕಾರ,ಪ್ರಾಥಮಿಕ ಶಾಲೆಗಳಲ್ಲಿ ಶೇ.13ರಷ್ಟು ಹಾಗೂ ಪ್ರೌಢಶಾಲೆಗಳಲ್ಲಿ ಶೇ.11ರಷ್ಟು ಶಿಕ್ಷಕರ ಕೊರತೆ ಇದೆ. ಶಿಕ್ಷಕರಿಗೆ ಹೆಚ್ಚಿನ ಹೊರೆಯಾಗಿರುವುದರಿಂದ ಹೆಚ್ಚಿನ ಸಿಬ್ಬಂದಿಯ ಅವಶ್ಯಕತೆಯಿದೆ ಎಂದು ಶಿಕ್ಷಕರು ಹೇಳುತ್ತಾರೆ. ಸಂಪಂಗಿ ರಾಮನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ (ಜಿಯುಎಚ್‌ಪಿಎಸ್‌) ಶಿಕ್ಷಕಿ ಶಕೀಲಾ ಬಾನು ಮಾತನಾಡಿ, ಶಿಕ್ಷಕರ ಕೊರತೆಯಿಂದ 12ರಿಂದ 16 ವಿಷಯಗಳನ್ನು ಹೆಚ್ಚುವರಿಯಾಗಿ ಬೋಧಿಸಬೇಕಾಗಿದೆ ಎಂದರು. 

ಬೈರಸಂದ್ರದ ಜಿಯುಎಚ್‌ಪಿಎಸ್‌ನ ಇನ್ನೋರ್ವ ಶಿಕ್ಷಕಿ ಸಲೇಹಾ ಫಾತಿಮಾ ಮಾತನಾಡಿ, ಹೆಚ್ಚು ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಸಲ್ಲಿಸುವಂತಹ ಹೆಚ್ಚುವರಿ ಕೆಲಸವನ್ನು ಮಾಡಬೇಕಾಗಿರುವುದರಿಂದ ವಿದ್ಯಾರ್ಥಿಗಳಿಗೆ ಸಂಪೂರ್ಣ ಗಮನವನ್ನು ನೀಡಲು ಸಾಧ್ಯವಾಗುತ್ತಿಲ್ಲ. ಒಂದು ಪ್ರಾಥಮಿಕ ಶಾಲಾ ಶಾಖೆಯಲ್ಲಿ ಸುಮಾರು 500 ವಿದ್ಯಾರ್ಥಿಗಳಿದ್ದು, ಪ್ರತಿ ತರಗತಿಗೆ 80 ರಿಂದ 90 ವಿದ್ಯಾರ್ಥಿಗಳಿರುವುದರಿಂದ ಹೊಸ ನೇಮಕಾತಿಯ ತುರ್ತು ಅಗತ್ಯವಿದೆ. ಇಷ್ಟು ದೊಡ್ಡ ಬ್ಯಾಚ್ ಅನ್ನು ಏಕಕಾಲದಲ್ಲಿ ನಿರ್ವಹಿಸುವುದು ಶಿಕ್ಷಕರಿಗೆ ಕಷ್ಟಕರವಾಗುತ್ತಿದೆ ಎಂದು ಅವರು ಹೇಳಿದರು.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಮುಗಿದಿದೆ: ನೀಲಸಂದ್ರದ ಜಿಯುಎಚ್‌ಪಿಎಸ್‌ನ ಪ್ರಭಾರಿ ಸೈಯದ್ ಸಾಜಿದ್ ಹುಸೇನಿ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳಿಂದ ಹೊಸ ನೇಮಕಾತಿ ನಡೆಯದ ಕಾರಣ ಹಲವು ಶಾಲೆಗಳು ಕೊರತೆ ಎದುರಿಸುತ್ತಿವೆ. ಈ ಸಮಯದಲ್ಲಿ ಅನೇಕ ಶಿಕ್ಷಕರು ನಿವೃತ್ತಿ ಹೊಂದಿದ್ದು ಹೊರೆಯನ್ನು ಹೆಚ್ಚಿಸಿದೆ. ಆದಾಗ್ಯೂ, 15,000 ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಿದ್ದೇವೆ ಎಂದು ಡಿಪಿಐ ಅಧಿಕಾರಿ ತಿಳಿಸಿದ್ದಾರೆ. ಈ ಕೊರತೆ ನೀಗಿಸಲು ಸದ್ಯಕ್ಕೆ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಹೆಚ್ಚಿನ ಶಿಕ್ಷಕರು ಪರೀಕ್ಷೆಗಳಲ್ಲಿ ತೇರ್ಗಡೆಯಾಗುವಂತೆ ಮಾಡಲು ನೇಮಕಾತಿ ಪ್ರಕ್ರಿಯೆ ಸುಲಭಗೊಳಿಸಲಾಗಿದೆ ಎಂದು ಅಧಿಕಾರಿ ಹೇಳಿದರು

ಶಿಕ್ಷಣ ತಜ್ಞ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ನಿರ್ವಹಣಾ ಸಂಘದ (ಕೆಎಎಂಎಸ್) ಪ್ರಧಾನ ಕಾರ್ಯದರ್ಶಿ ಡಿ ಶಶಿ ಕುಮಾರ್ ಮಾತನಾಡಿ,   ಹೆಚ್ಚಿನವರು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ಕಾರಣ ಶಿಕ್ಷಕರ ಕೊರತೆಯಾಗಿದೆ ಎಂಬುದನ್ನು  ಒಪ್ಪಿಕೊಂಡರು. ಅವರು ಹೇಳಿದರು: "ಹಣಕಾಸಿನ ಅಡೆತಡೆಗಳಿಂದಾಗಿ, ಬಜೆಟ್‌ನ ಪ್ರಮುಖ ಭಾಗವು ವೇತನಕ್ಕೆ ಹೋಗುವುದರಿಂದ ಸರ್ಕಾರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com