ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮನ ಪುತ್ರ ಚಂದ್ರಶೇಖರ್ ಸಾವು ಪ್ರಕರಣ: ಕೊಲೆ ಕೇಸ್ ದಾಖಲು
ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ.
ಎಫ್ ಐಆರ್ ನಲ್ಲಿ ಐಸಿಸಿ ಸೆಕ್ಷನ್ 302, 201 ಮತ್ತು 427 ಅಡಿ ಕೊಲೆ, ಸಾಕ್ಷ್ಯನಾಶ, ಮತ್ತು ವಾಹನ ಜಖಂ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮೃತ ಚಂದ್ರಶೇಖರ್ ಅವರ ತಂದೆ ರಮೇಶ್ ನೀಡಿರುವ ದೂರಿನ ಅನ್ವಯ ಎಫ್ ಐಆರ್ ದಾಖಲಾಗಿಸಿದೆ. ಈ ಮೊದಲು ವ್ಯಕ್ತಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ತುಂಗಾ ನಾಲೆಯಲ್ಲಿ ಪತ್ತೆಯಾದ ಕಾರಿನ ಹಿಂಬದಿಯ ಸೀಟ್ ನಲ್ಲಿ ಚಂದ್ರು ಮೃತದೇಹ ಪತ್ತೆಯಾಗಿತ್ತು. ಕೈಕಾಲು ಕಟ್ಟಿಹಾಕಿ, ಕಿವಿಗಳಿಗೆ ಹಲ್ಲೆ ಮಾಡಲಾಗಿದೆ. ಕಾರು ಪತ್ತೆಯಾಗಿದ್ದ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ವೇಳೆ ಎಫ್ ಎಸ್ ಎಲ್ ತಜ್ಞರು ಸ್ಯಾಂಪಲ್ ಗಳನ್ನು ಸಂಗ್ರಹಿಸಿದೆ. ಇನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ರೇಣುಕಾಚಾರ್ಯ ನೇರವಾಗಿ ಇದೊಂದು ಕೊಲೆ ಎಂದಿದ್ದಾರೆ. ಒಟ್ಟಾರೆ ಚಂದ್ರಶೇಖರ್ ಪ್ರಕರಣ ಮತ್ತಷ್ಟು ಗಂಭೀರತೆ ಪಡೆದಿದೆ.