ಮತದಾರರ ಮಾಹಿತಿ ಕಳ್ಳತನ: ಭಾರತೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಪತ್ರ ರವಾನೆ
ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಕೋರಿ ವಿರೋಧ ಪಕ್ಷದ ನಿಯೋಗವು ಶನಿವಾರ ಸಲ್ಲಿಸಿದ್ದ ಮನವಿ ಪತ್ರವನ್ನು ಚುನಾವಣಾಧಿಕಾರಿಗಳು ಭಾರತೀಯ ಚುನಾವಣಾ ಆಯೋಗಕ್ಕೆ ರವಾನಿಸಿದ್ದಾರೆ.
ಕಾಂಗ್ರೆಸ್ ನಾಯಕರು ಸಲ್ಲಿಸಿದ ಮನವಿ ಪತ್ರವನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಕುಮಾರ್ ಮೀನಾ ಅವರು ಹೇಳಿದ್ದಾರೆ.
ಈ ನಡುವೆ ಪ್ರಕರಣ ಸಂಬಂಧ ತನಿಖೆ ಆರಂಭಿಸಲಾಗಿದೆ ಎಂದು ಬೆಂಗಳೂರಿನ ಪ್ರಾದೇಶಿಕ ಆಯುಕ್ತರು ತಿಳಿಸಿದರು.
“ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬಹುದೇ ಎಂದು ನಾವು ಚುನಾವಣಾಧಿಕಾರಿಗಳ ಬಳಿ ಕೇಳಿಲಾಗಿದ್ದು, ಅಧಿಕಾರಿಗಳು ಭಾರತೀಯ ಚುನಾವಣಾ ಆಯೋಗವನ್ನು ಸಂಪರ್ಕಿಸಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ. ಚುನಾವಣಾಧಿಕಾರಿಗಳು ನಮ್ಮ ಬೇಡಿಕೆಗೆ ಸಮರ್ಪಕವಾಗಿ ಸ್ಪಂದಿಸದಿದ್ದರೆ ನಾವು ಭಾರತೀಯ ಚುನಾವಣಾ ಆಯೋಗವನ್ನು ಸಂಪರ್ಕಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
2023ರ ಚುನಾವಣೆಯಲ್ಲಿ ಸೋಲುವ ಆತಂಕದಲ್ಲಿರುವ ಬಿಜೆಪಿ ಮತದಾರರ ಅಂಕಿಅಂಶಗಳನ್ನು ತಿರುಚುವಲ್ಲಿ ತೊಡಗಿದೆ. ಚುನಾವಣೆ ಪೂರ್ಣಗೊಂಡ ಬಳಿಕವೂ ಮತದಾರರ ಮನೆಗಳಿಗೆ ಭೇಟಿ ನೀಡುತ್ತೇವೆ. ಜನರಿಗೆ ವ್ಯವಸ್ಥೆ ಮತ್ತು ಚುನಾವಣಾ ಆಯೋಗದ ಮೇಲೆ ನಂಬಿಕೆ ಬರಬೇಕಾದರೆ ಹಗರಣದಲ್ಲಿ ಭಾಗಿಯಾದವರನ್ನು ಬಯಲಿಗೆಳೆಯಬೇಕು ಎಂದು ತಿಳಿಸಿದರು.
ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ನಿನ್ನೆ ಬೆಳಿಗ್ಗೆ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿತು.
ಈ ವೇಳೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಆರೋಪದ ಮೇಲೆ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದರು,
ಚಿಲುಮೆ ಎಂಬ ಎನ್ಜಿಒ ಗುತ್ತಿಗೆ ಆಧಾರದ ಮೇಲೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಗುರುತಿನ ಚೀಟಿ ನೀಡಿದ್ದಾರೆ. ಒಂದು ಕೋಟಿಗೂ ಹೆಚ್ಚು ಮತದಾರರ ದತ್ತಾಂಶ ಸಂಗ್ರಹಿಸಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ