ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಸ್ಪೋಟಗೊಂಡ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ಹಸ್ತಾಂತರಿಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದಿಂದ ಶಾರೀಕ್'ಗೆ ಶೇಕಡಾ 40-45 ರಷ್ಟು ಸುಟ್ಟ ಗಾಯಗಳಾಗಿದ್ದು, ಆತನನ್ನು ಕರ್ನಾಟಕದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಫೋಟದಲ್ಲಿ ಆಟೋ ಚಾಲಕ ಮತ್ತು ಪ್ರಯಾಣಿಕನಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ (ಸಿಪಿ) ಎನ್ ಶಶಿಕುಮಾರ್ ಅವರು ತಿಳಿಸಿದ್ದಾರೆ.
ಈ ನಡುವೆ ಹೇಳಿಕೆ ನೀಡಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು, ಸ್ಫೋಟವು ಕಡಿಮೆ ತೀವ್ರತೆಯಿಂದ ಕೂಡಿದ್ದರಿಂದ ದೊಡ್ಡ ಅಪಾಯವೊಂದು ತಪ್ಪಿದಂತಾಗಿದೆ ಎಂದು ಹೇಳಿದ್ದಾರೆ.
ಬಾಂಬ್ ಬ್ಲಾಸ್ಟ್ ಆಗಿದ್ದರೆ ಉದ್ವಿಗ್ನ ವಾತಾವರಣ ಸೃಷ್ಟಿಯಾಗುತ್ತಿತ್ತು. ಆದರೆ, ಆ ವಿಚಾರದಲ್ಲಿ ದೇವರಿಗೆ ಧನ್ಯವಾದ ಸಲ್ಲಿಸಲೇಬೇಕು. ಸದ್ಯ ಅವನಿಗೆ ಚಿಕಿತ್ಸೆ ಮುಂದುವರೆದಿದೆ, ಅವನು ಗುಣಮುಖನಾದ ಬಳಿಕ ವಿಚಾರಣೆ ನಡೆಸುತ್ತೇವೆ. ಚಾಲಕ ಪುರುಷೋತ್ತಮ್ ಪೂಜಾರಿಗೆ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಅವರ ಸಂಬಂಧಿಕರ ಸಮಸ್ಯೆಗೂ ನಾವು ಸ್ಪಂದನೆ ಕೊಡುತ್ತೇವೆ. ಮಂಗಳೂರು ಮತ್ತು ಮೈಸೂರು ಪೊಲೀಸ್ ಆಯುಕ್ತರ ತನಿಖೆ ಮುಂದುವರೆಯುತ್ತಿದೆ ಎಂದು ಹೇಳಿದ್ದಾರೆ.
Advertisement