ಮಳವಳ್ಳಿಯಲ್ಲಿ ಅತ್ಯಾಚಾರದಿಂದ ಬಾಲಕಿ ಸಾವು: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಇತ್ತೀಚಿಗೆ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
Published: 16th October 2022 08:53 PM | Last Updated: 16th October 2022 08:55 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೆ.ಆರ್. ಪೇಟೆ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಇತ್ತೀಚಿಗೆ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಕೆ. ಆರ್.ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಭಾನುವಾರ ನಡೆದ ಮಹಾಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಳವಳ್ಳಿಯಲ್ಲಿ ನಡೆದ ಘಟನೆ ಅತ್ಯಂತ ಅಮಾನುಷವಾದದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆತನಿಗೆ ಶೀಘ್ರ ಶಿಕ್ಷೆಯಾಗುವಂತೆ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 10ಲಕ್ಷ ರೂ ಪರಿಹಾರ ನೀಡಲಾಗುವುದು ಎಂದರು.
ಇದನ್ನೂ ಓದಿ: ಮಳವಳ್ಳಿ: ಟ್ಯೂಶನ್ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ; ಆರೋಪಿ ಬಂಧನ; ಕಠಿಣ ಶಿಕ್ಷೆಗೆ ರಾಜಕೀಯ ಮುಖಂಡರ ಆಗ್ರಹ
"ಮಳವಳ್ಳಿಯಲ್ಲಿ ಇತ್ತಿಚೆಗೆ ನಡೆದ ಘಟನೆ ಅತ್ಯಂತ ಅಮಾನುಷವಾದುದು. ಆರೋಪಿಯನ್ನು ಬಂಧಿಸಲಾಗಿದ್ದು, ಆದಷ್ಟು ಶೀಘ್ರ ಆರೋಪಿಗೆ ಶಿಕ್ಷೆಯಾಗುವಂತೆ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 10ಲಕ್ಷ ರೂ ಪರಿಹಾರ ನೀಡಲಾಗುವುದು."
— CM of Karnataka (@CMofKarnataka) October 16, 2022
ಮುಖ್ಯಮಂತ್ರಿ : @BSBommai
ಆರೋಪಿ ವಿರುದ್ಧ 302, 307, ಪೋಕ್ಸೋ ಸೆಕ್ಷನ್ಗಳನ್ನು ಹಾಕಲಾಗಿದೆ. ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚಿಸಿದ್ದೆ. ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಅವರು ಹೇಳಿದ್ದು, ಆರೋಪಿಗೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಅವರು ತಿಳಿಸಿದರು.
ತ್ರಿವೇಣಿ ಸಂಗಮದಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ಸರ್ಕಾರದ ವತಿಯಿಂದ ಕುಂಭ ಮೇಳ ಆಚರಿಸಲು ಶೀಘ್ರ ಆದೇಶ ಹೊರಡಿಸಲಾಗುವುದು, ಸಂಗಮ ಸ್ಥಳವನ್ನು ತೀರ್ಥಕ್ಷೇತ್ರ ಮತ್ತು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.