ಬೆಂಗಳೂರು ಅಭಿವೃದ್ಧಿಗೆ ಸ್ವತಂತ್ರ ಸಚಿವರಿಲ್ಲ: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಟಾಂಗ್

ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜನರ ಬದುಕು ನರಕ ಸದೃಶವಾಗಿದೆ. ಮುಖ್ಯಮಂತ್ರಿಗಳು ಮಾತ್ರ ಇದಕ್ಕೆಲ್ಲ ಹಿಂದಿನ ಸರ್ಕಾರಗಳು ಕಾರಣ ಎಂದು ಓಡಾಡುತ್ತಿದ್ದಾರೆ. ಸರ್ಕಾರ ಇಂತಹ ಬೇಜವಾಬ್ಧಾರಿ ಆಡಳಿತವನ್ನು ನಿಲ್ಲಿಸಿ ನಾಗರಿಕರಿಗೆ ನೆಮ್ಮದಿ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ

ಎಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜನರ ಬದುಕು ನರಕ ಸದೃಶವಾಗಿದೆ. ಮುಖ್ಯಮಂತ್ರಿಗಳು ಮಾತ್ರ ಇದಕ್ಕೆಲ್ಲ ಹಿಂದಿನ ಸರ್ಕಾರಗಳು ಕಾರಣ ಎಂದು ಓಡಾಡುತ್ತಿದ್ದಾರೆ. ಸರ್ಕಾರ ಇಂತಹ ಬೇಜವಾಬ್ಧಾರಿ ಆಡಳಿತವನ್ನು ನಿಲ್ಲಿಸಿ ನಾಗರಿಕರಿಗೆ ನೆಮ್ಮದಿ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಎ.ಟಿ ರಾಮಸ್ವಾಮಿ ಬೆಂಗಳೂರಿನಲ್ಲಿ 11980 ಎಕರೆ ಭೂಮಿ ಒತ್ತುವರಿಯಾಗಿತ್ತು ಎಂದು ವರದಿ ನೀಡಿದ್ದರು. ಇದರಲ್ಲಿ 1,1680 ಎಕರೆ ಭೂಮಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿ ತೆರವುಗೊಳಿಸಿದ್ದೆವು. ಎ.ಟಿ. ರಾಮಸ್ವಾಮಿಯವರು ಅತಿಕ್ರಮಣವಾಗಿದೆಯೆಂದು ಹೇಳಿದ ಜಾಗವನ್ನು ತೆರವುಗೊಳಿಸುವುದರ ಜೊತೆಗೆ 7 ಸಾವಿರ ಎಕರೆಗಳನ್ನು ಹೆಚ್ಚುವರಿಯಾಗಿ ತೆರವುಗೊಳಿಸಿದ್ದೆವು. ನಾವು ತೆರವುಗೊಳಿಸಿದ್ದ ಜಮೀನಿನ ಅಂದಾಜು ಮೌಲ್ಯ 4 ಲಕ್ಷ ಕೋಟಿ ರೂಪಾಯಿಗಳೆಂದು ಅಂದಾಜು ಮಾಡಲಾಗಿತ್ತು. ಅಪೊಲೊ ಆಸ್ಪತ್ರೆಯಿಂದ 5 ಎಕರೆ, ರಾಷ್ಟ್ರೋತ್ಥಾನ ಪರಿಷತ್‍ನಿಂದ 10 ಎಕರೆ, ಮಿಥಿಕ್ ಸೊಸೈಟಿ ಸೇರಿದಂತೆ ಹಲವರಿಂದ ವಾಪಸ್ಸು ಪಡೆಯಲಾಗಿತ್ತು ಎಂದು ತಿಳಿಸಿದ್ದಾರೆ. 

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಗೋಮಾಳ, ಕೆರೆ, ಕಟ್ಟೆ, ಕುಂಟೆ, ಸರ್ಕಾರಿ ಖರಾಬು, ಗ್ರಾಮಠಾಣ, ಗುಂಡುತೋಪು, ಸ್ಮಶಾನ ಸೇರಿದಂತೆ ಸುಮಾರು 1.23 ಲಕ್ಷ ಎಕರೆ ಭೂಮಿ ಸರ್ಕಾರಕ್ಕೆ ಸೇರಿದ್ದಾಗಿದೆ ಎಂಬ ಮಾಹಿತಿಯನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತರಬಯಸುತ್ತೇನೆ. ನಾವು ಒತ್ತುವರಿಯನ್ನಷ್ಟೆ ತೆರವುಗೊಳಿಸಿರಲಿಲ್ಲ. ಸರ್ಕಾರಕ್ಕೆ ಪಡೆದ ಜಮೀನನ್ನು ಸದುಪಯೋಗ ಪಡಿಸಿಕೊಳ್ಳಲು ಯೋಜಿಸಿದ್ದೆವು. ಬಡವರಿಗಾಗಿ 1 ಲಕ್ಷ ಮನೆ ಕಟ್ಟಲು 1500 ಎಕರೆ ಭೂಮಿಯನ್ನು ವಸತಿ ಇಲಾಖೆಗೆ ನೀಡಲಾಗಿತ್ತು. ಸೋಮಣ್ಣನವರು ಇತ್ತೀಚೆಗೆ ಹಾಗೆ ಯಾವುದೇ ಜಮೀನು ಕೊಟ್ಟಿರಲಿಲ್ಲ ಎಂದು ಹೇಳಿದ್ದರು. ಅವರೂ ಸಹ ದಾಖಲೆಗಳನ್ನು ತೆಗೆದು ನೋಡಲಿ, ವಾಸ್ತವಾಂಶ ಏನೆಂದು ಅರ್ಥವಾಗುತ್ತದೆ ಎಂದಿದ್ದಾರೆ. 

ನಮ್ಮ ಸರ್ಕಾರದ ಅವಧಿಯಲ್ಲಿ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಿದ್ದೆವು. ಸೆಪ್ಟೆಂಬರ್ 26, 2014 ರಲ್ಲಿ ಒಂದೆ ದಿನ ಬಿದ್ದ ಮಳೆಯ ಪ್ರಮಾಣ 132 ಮಿ.ಮೀಟರುಗಳಷ್ಟಿತ್ತು. ಆದರೆ ಮೊನ್ನೆ  ಭಾನುವಾರ  ಬಿದ್ದ ಮಳೆಯ ಪ್ರಮಾಣ 131.6 ಮಿಮೀ ಮಾತ್ರ. ಆದರೂ ಬೆಂಗಳೂರಿನ ರಸ್ತೆಗಳಲ್ಲಿ ದೋಣಿಗಳನ್ನು ಓಡಾಡಿಸಬೇಕಾದ ಪರಿಸ್ಥಿತಿ ಬಂದಿತ್ತು. ಐ ಟಿ ಕಂಪೆನಿಗಳು ಸರ್ಕಾರಕ್ಕೆ ಪತ್ರ ಬರೆದು ವ್ಯವಸ್ಥೆ ಸರಿಪಡಿಸದಿದ್ದರೆ ಹೊರ ರಾಜ್ಯಗಳಿಗೆ ಹೋಗಬೇಕಾಗುತ್ತದೆ ಎಂದವು. ಸರ್ಕಾರದ ಆರೋಗ್ಯ ಸಚಿವರು ಪತ್ರ ಬರೆದ ಐಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಧಮಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಒತ್ತುವರಿದಾರರಿಗೆ ಮಾರಾಟ ಮಾಡುವ ರಿಯಲ್ ಎಸ್ಟೇಟ್ ದಂಧೆಗೆ ಅನುಕೂಲ ಮಾಡಿಕೊಡುವ  ಕಾನೂನನ್ನು ಇದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ರೆವಿನ್ಯೂ ಲೇಔಟ್‍ಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ನಿವೇಶನಗಳನ್ನು ಮುಕ್ತವಾಗಿ ಖಾತೆ ಮಾಡಿಕೊಡಲು  ಬೊಮ್ಮಾಯಿಯವರ ಸರ್ಕಾರವೇ ಅವಕಾಶ ನೀಡಿದೆ. ಪ್ರತಿ ನಿವೇಶನವನ್ನು ನೋಂದಣಿ ಮಾಡುವಾಗ ಯಾರ್ಯಾರು ಎಷ್ಟೆಷ್ಟು ಕಮಿಷನ್ ತಿನ್ನುತ್ತಿದ್ದಾರೆ ಎಂಬ ಮಾಹಿತಿ ಈಗ ಎಲ್ಲರ ಬಳಿ ಇದೆ. ಅಕ್ರಮ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಇದ್ದ ನಿರ್ಬಂಧವನ್ನು ಬೊಮ್ಮಾಯಿಯವರ ಸರ್ಕಾರವೇ  ಸಂಪೂರ್ಣವಾಗಿ ತೆಗೆದು ಹಾಕಿದೆ ಎಂದು ಅವರು ಆರೋಪಿಸಿದ್ದಾರೆ. 

ಬೊಮ್ಮನಹಳ್ಳಿಯ ಸತೀಶ್ ರೆಡ್ಡಿಯವರು ಎಷ್ಟು ವರ್ಷದಿಂದ ಬಿಜೆಪಿ ಶಾಸಕರು? ಮಹದೇವಪುರದ ಅರವಿಂದ ಲಿಂಬಾವಳಿಯವರು ಎಷ್ಟು ವರ್ಷದಿಂದ ಮಹದೇವಪುರವನ್ನು ಬಿಜೆಪಿಯಿಂದ ಆಯ್ಕೆಯಾಗುತ್ತಿದ್ದಾರೆ? ಕೆ. ಆರ್ ಪುರಂನ ನಂದೀಶ್ ರೆಡ್ಡಿ ಯಾವ ಪಕ್ಷದವರಾಗಿದ್ದರು? ಈಗಿರುವ ನಗರಾಭಿವೃದ್ಧಿ ಸಚಿವರಾದ ಬಸವರಾಜು  ಯಾವ ಪಕ್ಷದಿಂದ ಆಯ್ಕೆಯಾಗಿದ್ದಾರೆ? ಇವರುಗಳೆಲ್ಲ ತಮ್ಮ ಕ್ಷೇತ್ರಗಳನ್ನು ಸರಿಪಡಿಸಿಕೊಳ್ಳಲು ಯಾವ ಪ್ರಯತ್ನ ಮಾಡಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿಗಾಗಿ ಈವರೆಗೂ ಒಬ್ಬ ಸ್ವತಂತ್ರ ಸಚಿವರನ್ನು ಬೊಮ್ಮಾಯಿ ಸರ್ಕಾರ ನೇಮಿಸಿಲ್ಲ. ಶಿಸ್ತಿನ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯು ಬೆಂಗಳೂರು ನಗರಾಭಿವೃದ್ಧಿಗಾಗಿ ಒಬ್ಬ ಸಚಿವರನ್ನು ನೇಮಿಸಿದರೆ ಉಳಿದವರು ಕಿತ್ತಾಟಕ್ಕಿಳಿಯುತ್ತಾರೆ. ಅದನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಈ ಖಾತೆಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದಾರೆ. ಬೆಂಗಳೂರಿಗರ ಕಷ್ಟವನ್ನು ಕೇಳುವವರು ಗತಿಯಿಲ್ಲ. ಹಾಗಾಗಿ ಬಿಜೆಪಿಯ ಸನಾತನ ತಂತ್ರವಾದ ತಾನು ಚೆನ್ನಾಗಿ ತಿಂದು ಮೇಕೆ ಬಾಯಿಗೆ ಒರೆಸುವ ಕೋತಿಯ ತಂತ್ರವನ್ನು ಜನರು ಅರ್ಥಮಾಡಿಕೊಳ್ಳದಷ್ಟು ದಡ್ಡರೇನಲ್ಲ ಎಂದಿದ್ದಾರೆ. 

ಮುಖ್ಯ ಮಂತ್ರಿಗಳಿಗೆ ಧೈರ್ಯವಿದ್ದರೆ ಬೆಂಗಳೂರು ಅಭಿವೃದ್ಧಿಯ ಬಗ್ಗೆಯೇ ಅಧಿವೇಶನದಲ್ಲಿ ಪ್ರತ್ಯೇಕ ಚರ್ಚೆ ನಡೆಸಲಿ. ಜೊತೆಗೆ ಕಳೆದ 20 ವರ್ಷಗಳಲ್ಲಿ ಏನೇನಾಗಿದೆ ಎಂಬ ಕುರಿತು ಸಮಗ್ರ ವರದಿ ಬಿಡುಗಡೆ ಮಾಡಬೇಕು. ಎಲ್ಲಕ್ಕಿಂತ ಮುಖ್ಯವಾಗಿ, ರಿಯಲ್ ಎಸ್ಟೇಟ್‍ನವರಿಗೆ ಅನುಕೂಲ ಮಾಡಿಕೊಡುವ ಕಾನೂನುಗಳನ್ನು ಹಿಂಪಡೆದು, ಸಮಸ್ಯೆಗಳು ಎಲ್ಲಿವೆ ಎಂದು ಪತ್ತೆ ಹಚ್ಚಿ ಜನಪರವಾಗಿ ಕೆಲಸ ಮಾಡಿ ನಗರದ ಜನರಿಗೆ ನೆಮ್ಮದಿ ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com