ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ.
ಪ್ರಕರಣದಲ್ಲಿ ಆರೋಪಿಗಳು ಕೋಟ್ಯಂತರ ರೂಪಾಯಿ ಹಣಕಾಸು ವಹಿವಾಟು ನಡೆಸಿದ್ದಾರೆ, ಅಲ್ಲದೆ ಭ್ರಷ್ಚಾಚಾರ ಕಂಡುಬಂದಿದೆ ಎಂದು ಇಡಿಗೆ ಸಿಐಡಿ ಪತ್ರ ಬರೆದಿದ್ದು, ಈ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಇಡಿ ಆರೋಪಿಗಳ ವಿಚಾರಣೆಗೆ ಅನುಮತಿ ನೀಡುವಂತೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡಿದೆ.
ನೇಮಕಾತಿ ಹಗರಣದಲ್ಲಿ ಅಕ್ರಮವಾಗಿ ನೇಮಕಾತಿ ಆಗಿರುವ ಆರೋಪಿಗಳಿಂದ ತಲಾ 30 ಲಕ್ಷ ರೂಪಾಯಿಯಿಂದ 1 ಕೋಟಿವರೆಗೂ ಹಣ ವಸೂಲಿ ಮಾಡಲಾಗಿದೆ ಎಂಬ ಸಂಗತಿ ಸಿಐಡಿ ತನಿಖೆಯಿಂದ ಹೊರಬಂದಿತ್ತು.
ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಸಹಾಯ ನಿರ್ದೇಶಕ ಶೈಲೇಂದ್ರ ಕುಮಾರ್ ಚೌಬೆ ಅವರು ಪ್ರಕರಣ ದಾಖಲಿಸಿಕೊಂಡು ಬಂಧಿತ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.
545 ಪಿಎಸ್ಐ ಹುದ್ದೆಗಳ ಡೀಲ್ ನಡೆದಾಗ ಎಡಿಜಿಪಿ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್ಪಿ ಹಾಗೂ ಎಫ್ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಅವರನ್ನು ಬಂಧಿಸಲಾಗಿದೆ.
Advertisement